ಗಜೇಂದ್ರಗಡ: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಸಮೀಪದ ಲಕ್ಕಲಕಟ್ಟಿ ಗ್ರಾಮದ ಮಹಿಳೆಯರು, ಮಕ್ಕಳು ಸೇರಿದಂತೆ ನಿವಾಸಿಗಳು ಗ್ರಾಮ ಪಂಚಾಯ್ತಿ ಎದುರು ಶುಕ್ರವಾರ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.
‘ಕಳೆದ ಹಲವು ವರ್ಷಗಳಿಂದ ಗ್ರಾಮದ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವಲ್ಲಿ ಗ್ರಾಮ ಪಂಚಾಯ್ತಿ, ತಾಲ್ಲೂಕು ಆಡಳಿತ ವಿಫಲವಾಗಿದ್ದು, ಸದ್ಯ ಟ್ಯಾಂಕರ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಆದರೂ ಗ್ರಾಮದ ಎಲ್ಲ ಜನರಿಗೂ ಸಮರ್ಪಕ ನೀರು ಸಿಗುತ್ತಿಲ್ಲ. ಟ್ಯಾಂಕರ್ ನೀರು ಬಂದಾಗ ಎಲ್ಲ ಕೆಲಸಗಳನ್ನು ಬದಿಗಿರಿಸಿ ನೀರು ತರುವುದೇ ದೊಡ್ಡ ಕೆಲಸವಾಗಿ ಬಿಟ್ಟಿದೆ. ಅಲ್ಲದೇ ಶಾಶ್ವತ ಪರಿಹಾರಕ್ಕೆ ಮುಂದಾಗದಿರುವುದು ಅಧಿಕಾರಿಗಳ, ಜನಪ್ರತಿನಿಧಿಗಳ ಬೇಜವಾಬ್ದಾರಿಗೆ ಹಿಡಿದ ಕನ್ನಡಿ ಯಾಗಿದೆ’ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
‘ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ ಈಗಾಗಲೇ ತಹಶೀಲ್ದಾರ್, ಟಾಸ್ಕ್ ಪೋರ್ಸ್ನವರು ಸೇರಿದಂತೆ ಇತರ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಲ್ಲದೇ ಹೊಸ ಬೋರ್ವೆಲ್ ಕೊರೆಸಲು ಅನುಮತಿ ಕೊರಲಾಗಿದೆ. ಅನುಮತಿ ನೀಡಿಲ್ಲ. ಈಗ ಟ್ಯಾಂಕರ್ಗಳ ಮೂಲಕ ನೀರು ಪೂರೈಸುತ್ತಿದ್ದೇವೆ. ಮತ್ತೊಂದು ಹೆಚ್ಚುವರಿ ಟ್ಯಾಂಕರ್ ನೀರು ಪೂರೈಸಲು ಇಂದು ಪತ್ರ ಬರೆಯಲಾಗುವುದು’ ಎಂದು ಗ್ರಾಮ ಪಂಚಾಯ್ತಿ ಪಿ.ಡಿ.ಒ ಫಕ್ರುದ್ದೀನ್ ನದಾಫ ಹೇಳಿದರು.