ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವ ಕುರಿತು ಮೋದಿ–ಶಾ ಜತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು (ಗುರುವಾರ) ಸಂಜೆ ದೆಹಲಿಗೆ ತೆರಳುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದೇನೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ನಾಳೆ ವಾಪಾಸಾಗುತ್ತೇನೆ.ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ವರಿಷ್ಠರ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಪ್ರವಾಹ ಪರಿಹಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಚಿವರು ಈಗಾಗಲೇ ಪ್ರವಾಸ ಮಾಡುತ್ತಿದ್ದು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅತಿವೃಷ್ಟಿ ಭಾದಿತ ಜನರಿಗೆ ಸರ್ಕಾರ ಎಲ್ಲ ನೆರವು ನೀಡುತ್ತಿದೆ. ಕೇಂದ್ರ ಸರ್ಕಾರ ಕೂಡಾ ಶೀಘ್ರದಲ್ಲೇ ರಾಜ್ಯದ ನೆರವಿಗೆ ಧಾವಿಸಲಿದೆ. ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಸತಿ ರಹಿತರಿಗೆ ತಾತ್ಕಾಲಿಕವಾಗಿ ಷೆಡ್ ನಿರ್ಮಿಸಿಕೊಡಲಾಗುತ್ತಿದೆ ಎಂದೂ ಅವರು ತಿಳಿಸಿದರು.