ಹುಬ್ಬಳ್ಳಿ: ಇಲ್ಲಿನ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಂಸ್ಥೆ(ಕಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಪತ್ರಕರ್ತ, ಮಾಜಿ ರಾಜ್ಯಸಭಾ ಸದಸ್ಯ ಪಾಟೀಲ ಪುಟ್ಟಪ್ಪ ಅವರನ್ನು ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಾಪು ಆರೋಗ್ಯ ದಿನದಿಂದಕ್ಷೀಣಿಸುತ್ತಿದೆ. ಸದ್ಯ ಅವರು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಅವರು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದರು.
‘ರಾಜ್ಯ ಸರ್ಕಾರವು 2017ನೇ ಸಾಲಿನಲ್ಲಿ ಪಾಪು ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಬಸವ ಪುರಸ್ಕಾರವನ್ನು ಕಾರಣಾಂತರದಿಂದ ಇದುವರೆಗೂ ಅವರು ಸ್ವೀಕರಿಸಿಲ್ಲ. ಇನ್ನೆರಡು ದಿನದಲ್ಲಿ ಪುರಸ್ಕಾರದೊಂದಿಗೆ ಪ್ರಶಸ್ತಿ ಮೊತ್ತ ₹ 10 ಲಕ್ಷವನ್ನು ಅವರಿಗೆ ತಲುಪಿಸಲಾಗುವುದು ಹಾಗೂ ಆಸ್ಪತ್ರೆಯ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ’ ಎಂದು ತಿಳಿಸಿದರು.