ನವದೆಹಲಿ: ಭಾರಿ ಪ್ರವಾಹದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರದ ನೆರವಿನ ಅಗತ್ಯವಿದೆ. ಶೀಘ್ರವೇ ₹ 5,000 ಕೋಟಿ ಮಧ್ಯಂತರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಶನಿವಾರ ಸಂಜೆ ಶಾ ಅವರನ್ನು ಭೇಟಿ ಮಾಡಿ ವಿವರಣೆ ನೀಡಿ, ಪ್ರವಾಹದಿಂದಾಗಿ ರಾಜ್ಯದ 18 ಜಿಲ್ಲೆಗಳ 10ಕ್ಕೂ ಹೆಚ್ಚು ನಗರಗಳು, 20ಕ್ಕೂ ಅಧಿಕ ಪಟ್ಟಣಗಳು, 150 ಗ್ರಾಮಗಳು ಜಲಾವೃತವಾಗಿ ಅಂದಾಜು ₹ 45,000 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ಹೇಳಿದರು.
ನದಿಗಳು ಉಕ್ಕಿ ಹರಿದ ಪರಿಣಾಮ ನೀರು ನುಗ್ಗಿದ್ದರಿಂದ ಲಕ್ಷಾಂತರ ಮನೆಗಳು ನೆಲಸಮವಾಗಿದ್ದು, ಬಹುತೇಕ ಗ್ರಾಮಗಳನ್ನು ಸ್ಥಳಾಂತರಿಸುವ ಅಗತ್ಯವಿದೆ. ಪರಿಸ್ಥಿತಿಯ ಪರಿಶೀಲನೆಗಾಗಿ ಕೇಂದ್ರದ ಅಧ್ಯಯನ ತಂಡವನ್ನು ಆದಷ್ಟು ಶೀಘ್ರ ಕಳುಹಿಸಿಕೊಡಬೇಕು. ಅದಕ್ಕೆ ಮುಂಚಿತವಾಗಿ ಮಧ್ಯಂತರ ಪರಿಹಾರ ಮಂಜೂರು ಮಾಡಬೇಕು ಎಂದು ಕೋರಿದರು.
‘ಕೇಂದ್ರ ಸರ್ಕಾರ ಬಿಡಿಗಾಸನ್ನೂ ಪರಿಹಾರವಾಗಿ ಬಿಡುಗಡೆ ಮಾಡದೆ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸುತ್ತಿದ್ದಾರೆ. ಆಧಾರರಹಿತ ಆರೋಪದಲ್ಲಿ ನಿರತರಾಗಿರುವ ಕಾಂಗ್ರೆಸ್ ಮುಖಂಡರು ತಲೆತಿರುಕರು’ ಎಂದು ಯಡಿಯೂರಪ್ಪ ಟೀಕಿಸಿದರು.