ಮುಂದುವರಿದ ಬಿಜೆಪಿ ಧರಣಿ: ವಿಧಾನಸಭಾ ಕಲಾಪ 10 ನಿಮಿಷ ಮುಂದೂಡಿಕೆ

ಬೆಂಗಳೂರು: ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿದ್ದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರತಿಪಕ್ಷ ಬಿಜೆಪಿ ವಿರೋಧ ವ್ಯಕ್ತಪಡಿಸಿತು. ಹೀಗಾಗಿ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚರ್ಚೆ ಆರಂಭಿಸುತ್ತಿದ್ದಂತೆ ಬಿಜೆಪಿ ಶಾಸಕರು ‘Go Back CM’ ಎಂದು ಘೋಷಣೆ ಕೂಗಿದರು. ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್, ‘ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರಣ ಇಲ್ಲದೆ ಪ್ರತಿಭಟನೆ ನಡೆಸುತ್ತಿರುವುದು ಇದೇ ಮೊದಲು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದೇ ವೇಳೆ ಸಚಿವ ಕೃಷ್ಣ ಭೈರೇಗೌಡ ಮಾತನಾಡಿ, ‘ನಿಮಗೆ ತಾಕತ್ತಿದ್ದರೆ ಸದನದಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ’ ಎಂದು ಬಿಜೆಪಿಯವರಿಗೆ ಸವಾಲೆಸೆದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ, ‘ಬಹುಮತವಿಲ್ಲದ ಸರ್ಕಾರಕ್ಕೆ ಧಿಕ್ಕಾರ, ಧಿಕ್ಕಾರ’ ಎಂದು ಘೋಷಣೆ ಕೂಗಿದ್ದರು.
ಬಜೆಟ್ ಪ್ರತಿ ಮಾಧ್ಯಮಗಳಿಗೆ ನೀಡಲು ಒಪ್ಪಿಗೆ: ಬಜೆಟ್ ಭಾಷಣದ ಕಡೆಗೆ ಎಲ್ಲರ ಗಮನ ಸೆಳೆಯುವ ಉದ್ದೇಶದಿಂದ ಬಜೆಟ್ ಭಾಷಣ ಮುಗಿದ ಬಳಿಕ ಬಜೆಟ್ ಪ್ರತಿಗಳನ್ನು ಸದನದ ಸದಸ್ಯರಿಗೆ ಮತ್ತು ಮಾಧ್ಯಮಗಳಿಗೆ ನೀಡುವ ತೀರ್ಮಾನಕ್ಕೆ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಒಪ್ಪಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸದಸ್ಯರಿಗೆ ಅಧಿಕೃತ ಮಾಹಿತಿ ನೀಡಲಾಗಿದೆ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ತಿಳಿಸಿದರು. ಸಂಸತ್ನಲ್ಲಿ ಇದೇ ರೀತಿಯ ವ್ಯವಸ್ಥೆ ಇದೆ ಎಂದು ಸಮರ್ಥನೆ ನೀಡಿದರು.
ಇದನ್ನೂ ಓದಿ... ವಿರೋಧ ಪಕ್ಷದಿಂದ ಪರಿಷತ್ ಕಲಾಪಕ್ಕೆ ಅಡ್ಡಿ: 12 ಗಂಟೆವರೆಗೆ ಕಲಾಪ ಮುಂದೂಡಿಕೆ
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.