ಧಾರವಾಡ: ಇಲ್ಲಿನ ಕುಮಾರೇಶ್ವರ ನಗರದಲ್ಲಿ ಮಾರ್ಚ್ 19ರಂದು ಸಂಭವಿಸಿದ ಕಟ್ಟಡ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ನಗರ ಯೋಜನಾ ವಿಭಾಗದ ಮೂವರು ಅಧಿಕಾರಿಗಳನ್ನು ಉಪನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ವಿಭಾಗದ ಉಪನಿರ್ದೇಶಕ ಬಿ.ವಿ.ಹಿರೇಮಠ, ಸಹಾಯಕ ನಿರ್ದೇಶಕ ಅಶೋಕ ಗದಗ ಹಾಗೂ ನಗರ ಯೋಜಕ ಮುಕುಂದ ಜೋಶಿ ಅವರನ್ನು ಬಂಧಿಸಿದ್ದು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಡಿ.ಎಲ್.ನಾಗೇಶ ಪ್ರತಿಕ್ರಿಯಿಸಿ, ‘ಕಟ್ಟಡ ಪೂರ್ಣಗೊಂಡ ಪ್ರಮಾಣ ಪತ್ರ ನೀಡಿರುವುದು ಸೇರಿದಂತೆ ವಿವಿಧ ಪ್ರಮಾದ ಎಸಗಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಅಧಿಕಾರಿಗಳನ್ನು ಬಂಧಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.