ಬೆಳಗಾವಿ: ‘ಮಾರಕ ರೋಗ ಕೋವಿಡ್–19 ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂದಿರುವ ಹಾಟ್ಸ್ಪಾಟ್ ಪ್ರದೇಶಗಳನ್ನು ಹೊರತುಪಡಿಸಿ ಇತರ ಪ್ರದೇಶಗಳಲ್ಲಿ ಬಸ್ ಸಂಚಾರ ಆರಂಭಿಸುವ ಚಿಂತನೆ ನಡೆದಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ, ಹಿರೇಬಾಗೇವಾಡಿ ಹಾಗೂ ಕುಡಚಿ ಪ್ರದೇಶವನ್ನು ಹಾಟ್ಸ್ಪಾಟ್ ಪ್ರದೇಶವೆಂದು ಗುರುತಿಸಲಾಗಿದೆ. ಈ ಪ್ರದೇಶಗಳನ್ನು ಹೊರತುಪಡಿಸಿ, ಇನ್ನುಳಿದ ಆಯಾ ತಾಲ್ಲೂಕುಗಳಲ್ಲಿ ಬಸ್ ಸಂಚಾರ ಆರಂಭಿಸಲಾಗುವುದು’ ಎಂದರು.
‘ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯಬಾರದು. ನಿಗದಿತ ದರದಷ್ಟೇ ಹಣವನ್ನು ಪಡೆಯಬೇಕೆಂದು ಸಾರಿಗೆ ಸಿಬ್ಬಂದಿಗಳಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.