ಬೆಳಗಾವಿ: ಮುಂದಿನ ಲೋಕಸಭಾ ಚುನಾವಣೆಯವರೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲ್ಲ. ಮಾಡಿದರೆ ಸರ್ಕಾರ ಅಸ್ಥಿರಗೊಂಡು, ಪತನವಾಗುವುದು ಖಚಿತ ಎಂದು ಶಾಸಕ ಜಗದೀಶ ಶೆಟ್ಟರ್ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಜನಾದೇಶದ ವಿರುದ್ಧ ರಚನೆಯಾಗಿರುವ ಸರ್ಕಾರ ಇದಾಗಿದ್ದು, ಹೆಚ್ಚು ದಿನ ಬಾಳಲಾರದು. ಎಚ್.ಡಿ. ಕುಮಾರಸ್ವಾಮಿ ಅವರದ್ದು ಅಸ್ಥಿರ ಸರ್ಕಾರವಾಗಿದೆ. ಈ ಭಯದಿಂದಲೇ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿಲ್ಲ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರ ಸರ್ಕಾರವು ಮೈಸೂರು ಭಾಗದ 4–5 ಜಿಲ್ಲೆಗಳಿಗೆ ಸೀಮಿತವಾದ ಸರ್ಕಾರವಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕೈಗೊಳ್ಳುತ್ತಿಲ್ಲ. ಸಂಪೂರ್ಣ ನಿರ್ಲಕ್ಷ ಮಾಡಿದ್ದಾರೆ. ಈ ಭಾಗಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಜರಿದರು.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಹೊರಗೆ ಬರುತ್ತಿಲ್ಲ. ಯಾವ ಶಾಸಕರ ಕೈಗೂ ಸಿಗುತ್ತಿಲ್ಲವೆಂದು ಕಾಂಗ್ರೆಸ್ ಮುಖಂಡರೇ ಹೇಳಿದ್ದಾರೆ. ಅನುದಾನ ಸಮರ್ಪಕವಾಗಿ ಸಿಗುತ್ತಿಲ್ಲವೆಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಟೀಕಿಸಿದರು.