ಬೆಂಗಳೂರು: ಅಕ್ರಮವಾಗಿ ನಿವೇಶನ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಬಿಜೆಪಿ ಶಾಸಕ ಸಿ.ಟಿ.ರವಿ, ಅವರ ಪತ್ನಿ ಪಲ್ಲವಿ ರವಿ ಹಾಗೂ ಸಂಬಂಧಿಕರಾದ ತೇಜಸ್ವಿನಿ ಮತ್ತು ಅವರ ಪತಿ ತೇಜಸ್ವಿನಿ ಸುದರ್ಶನ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಈ ಕುರಿತಂತೆ ರವಿ ಸೇರಿದಂತೆ ನಾಲ್ವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಮಾನ್ಯಮಾಡಿದೆ.
‘ರವಿ ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಕರ್ನಾಟಕ ಗೃಹ ಮಂಡಳಿಯಿಂದ (ಕೆಎಚ್ಬಿ) ಮೂರು ನಿವೇಶನ ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಆರ್.ದೇವಿಪ್ರಸಾದ್ ಅಧೀನ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇದರನ್ವಯ ಚಿಕ್ಕಮಗಳೂರು ಲೋಕಾಯುಕ್ತ ನ್ಯಾಯಾಲಯ ನಾಲ್ವರಿಗೆ ಸಮನ್ಸ್ ಜಾರಿಗೊಳಿಸಿತ್ತು.