ಚಿಕ್ಕಬಳ್ಳಾಪುರ: ‘ಇವತ್ತು ದೇಶದಲ್ಲಿ ಸಂವಿಧಾನ ತಿರುಚುವ ಹುನ್ನಾರ ನಡೆಯುತ್ತಿದೆ. ಅದಕ್ಕೆ ಯಾರೂ ಭಯ ಪಡುವ ಅಗತ್ಯವಿಲ್ಲ. ಒಂದೊಮ್ಮೆ ಸಂವಿಧಾನ ಬದಲಾವಣೆ ಮಾಡಲು ಹೊರಟರೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೋರಾಟ ನಡೆಯುತ್ತದೆ. ಸಂವಿಧಾನಕ್ಕೆ ಧಕ್ಕೆ ಆದರೆ ರಕ್ತಪಾತವಾಗುತ್ತದೆ’ ಎಂದು ಮಾಜಿ ಸಚಿವ ಎಚ್.ಆಂಜನೇಯ ಎಚ್ಚರಿಕೆ ನೀಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸರ್ವಜನರ ಸಂವಿಧಾನ ಸಮಾವೇಶ’ದಲ್ಲಿ ಅವರು ಮಾತನಾಡಿದರು.
‘ನಮ್ಮದು ಸರ್ವಧರ್ಮ ಸಂವಿಧಾನ. ಅದನ್ನು ಸೂರ್ಯ ಚಂದ್ರ ಇರುವವರೆಗೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಇವತ್ತು ನರೇಂದ್ರ ಮೋದಿ ಅವರು ಈ ದೇಶದ ಪ್ರಧಾನಿಯಾಗಿದ್ದಾರೆ ಎಂದರೆ ಅದಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ಕಾರಣ’ ಎಂದರು.
‘ಇವತ್ತು ಬಂಡವಾಳಶಾಹಿಗಳ ಪರವಾಗಿರುವ ಮೋದಿ ಅವರ ಸರ್ಕಾರ ಬಡವರು, ಶ್ರಮಿಕರು, ರೈತರ ವಿರೋಧಿಯಾಗಿದೆ’ ಎಂದು ಆರೋಪಿಸಿದರು.