ಬೆಂಗಳೂರು: ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಗೆ ದಿನ ಗಣನೆ ಆರಂಭವಾಗುತ್ತಿದ್ದಂತೆ ಗೃಹ ಇಲಾಖೆಯಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ.
ನೀತಿ ಸಂಹಿತೆ ಘೋಷಣೆಯಾದ ಬಳಿಕ ವರ್ಗಾವಣೆ ಮಾಡುವ ಅಧಿಕಾರ ಸರ್ಕಾರಕ್ಕೆ ಇರುವುದಿಲ್ಲ. ಹೀಗಾಗಿ ಗೃಹ ಇಲಾಖೆಯ ಆಯಕಟ್ಟಿನ ಹುದ್ದೆಗಳು, 12ಕ್ಕೂ ಹೆಚ್ಚು ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು, ಬೆಂಗಳೂರು ನಗರದ ಪ್ರಮುಖ ಹುದ್ದೆಗಳಲ್ಲಿರುವ ಅಧಿಕಾರಿಗಳನ್ನು ವರ್ಗಾಯಿಸುವ ಪಟ್ಟಿಯನ್ನು ಆಖೈರುಗೊಳಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಈ ಕಡತವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಿದ್ಧಪಡಿಸಿದ್ದು, ಮುಖ್ಯಮಂತ್ರಿ ಮುಂದೆ ಮಂಡನೆಯಾಗಿದೆ. ಅವರ ಅಂಕಿತ ಬಿದ್ದೊಡನೆ ಆದೇಶ ಹೊರಬೀಳಲಿದೆ.
ಮೈಸೂರು, ಮಂಡ್ಯ, ದಾವಣಗೆರೆ, ಬಳ್ಳಾರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳ ಎಸ್ಪಿಗಳು ವರ್ಗಾವಣೆ ಪಟ್ಟಿಯಲ್ಲಿದ್ದಾರೆ.