ಚಿಕ್ಕಬಳ್ಳಾಪುರ: ಮಳೆಗಾಲ ಆರಂಭಗೊಂಡು ಒಂದೂವರೆ ತಿಂಗಳಾದರೂ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಹಾಹಾಕಾರ ತಹಬದಿಗೆ ಬಂದಿಲ್ಲ. ಇಂದಿಗೂ ತಾಲ್ಲೂಕಿನ 49 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಆ ಪೈಕಿ 19 ಹಳ್ಳಿಗಳಿಗೆ ಟ್ಯಾಂಕರ್, 30 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಸಹಾಯದಿಂದ ನೀರು ಪೂರೈಕೆ ಮಾಡಲಾಗುತ್ತಿದೆ.
ಅಂತರ್ಜಲದ ತೀವ್ರ ಕೊರತೆಯಿಂದ ಶೇ 60 ರಷ್ಟು ಹೊಸ ಕೊಳವೆಬಾವಿಗಳು ವಿಫಲವಾಗಿವೆ. ಸದ್ಯ ನೀರಿನ ಸಮಸ್ಯೆ ಬಗೆಹರಿಸಲು ತಾಲ್ಲೂಕು ಆಡಳಿತ ಹೆಣಗಾಡುತ್ತಿದೆ. ಆದರೆ ಸ್ಥಳೀಯ ಶಾಸಕ ಡಾ.ಕೆ.ಸುಧಾಕರ್ ಅವರು ರಾಜೀನಾಮೆ ಆಟದಲ್ಲಿ ಮುಳುಗಿದ್ದಾರೆ ಎನ್ನುವುದು ಜನರ ಆಕ್ಷೇಪ.