ಬೆಂಗಳೂರು: ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸೋಮವಾರ (ಮಾರ್ಚ್ 4) ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ‘ಕರ್ನಾಟಕ ಮುನ್ನಡೆ’ ಹೆಸರಿನ ಕಾರ್ಯಕ್ರಮದಲ್ಲಿ ಸಂವಾದ ನಡೆಸಲಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ತನ್ನ ಜನಪರ, ಅಭಿವೃದ್ಧಿಪರ ಕಾರ್ಯಕ್ರಮ, ಯೋಜನೆಗಳ ಕುರಿತು ಮನದಾಳವನ್ನು ಮುಖ್ಯಮಂತ್ರಿ ಹಂಚಿಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ
ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕೆ, ಸಾಹಿತ್ಯ, ಮಾಧ್ಯಮ ಹೀಗೆ ಬೇರೆ ಬೇರೆ ಕ್ಷೇತ್ರಗಳಿಂದ ತಲಾ ಐವರು ಪರಿಣತರಿಗೆ ಈ ಕಾರ್ಯಕ್ರಮದ ಆಹ್ವಾನ ನೀಡಲಾಗಿದೆ. ಸುಮಾರು 100 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ತಜ್ಞರ ಸಲಹೆಗಳನ್ನು ಮುಖ್ಯಮಂತ್ರಿ ಸ್ವೀಕರಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.