ಸಾರ್ವತ್ರಿಕ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 2018ರ ಮಾರ್ಚ್ 2ರಂದು ‘ಆರೋಗ್ಯ ಕರ್ನಾಟಕ’ ಯೋಜನೆಗೆ ಚಾಲನೆ ನೀಡಿತು. ಈ ಯೋಜನೆಯಡಿ ಬಿಪಿಎಲ್ ಕುಟುಂಬದವರಿಗೆ ವರ್ಷಕ್ಕೆ ₹2 ಲಕ್ಷದ ಚಿಕಿತ್ಸೆ ನೀಡಲಾಗುತ್ತದೆ. ಕೇಂದ್ರ ಸರ್ಕಾರ 2018ರ ಮಾರ್ಚ್ 21ರಂದು ‘ಆಯುಷ್ಮಾನ್ ಭಾರತ್–ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆ’ ಆರಂಭಿಸಿತು. ಈ ಯೋಜನೆಯಡಿ ದೇಶದ 10 ಕೋಟಿ ಬಡ ಕುಟುಂಬಗಳಿಗೆ ಆರೋಗ್ಯ ಸೇವೆ ನೀಡುವ ಗುರಿ ಇರಿಸಿಕೊಳ್ಳಲಾಗಿದೆ. ಬಳಿಕ ‘ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ’ ಯೋಜನೆ ವಿಲೀನ ಮಾಡಲಾಯಿತು. ರಾಜ್ಯದಲ್ಲಿ ಬಿಪಿಎಲ್ ಕುಟುಂಬಗಳು 1.20 ಕೋಟಿ ಇವೆ. ಕೇಂದ್ರ ಪ್ರಾಯೋಜಿತ ಯೋಜನೆಯಡಿ 62.2 ಲಕ್ಷ ಕುಟುಂಬಗಳಿಗೆ ಲಾಭ ಸಿಗುತ್ತಿತ್ತು. ವಿಲೀನಗೊಂಡ ಬಳಿಕ ಯೋಜನೆಗೆ ರಾಜ್ಯ ಸರ್ಕಾರ ₹139 ಕೋಟಿ ಭರಿಸಿದ್ದರೆ, ಕೇಂದ್ರ ಸರ್ಕಾರ ಕೊಟ್ಟಿದ್ದು ₹22 ಕೋಟಿ ಮಾತ್ರ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.