ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಾಯಿ ನಿಷೇಧ, ಸಾಲ ಮನ್ನಾ ಗ್ರಾಮ ವಾಸ್ತವ್ಯದ ಫಲಶ್ರುತಿ: ಸಿಎಂ ಬಹಿರಂಗ ಪತ್ರ

Last Updated 5 ಜೂನ್ 2019, 16:29 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮ ವಾಸ್ತವ್ಯವನ್ನು ಮರಳಿ ಆರಂಭಿಸುತ್ತಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರ ನಿರ್ಧಾರಕ್ಕೆ ಪರ ವಿರೋಧದ ಚರ್ಚೆಗಳು ಆರಂಭವಾಗಿದೆ. ಇದೇ ವಿಚಾರವಾಗಿ ಇಂದು ಮಾಧ್ಯಮಗಳಿಗೆ ಬಹಿರಂಗ ಪತ್ರ ಬರೆದಿರುವ ಸಿಎಂ ಎಚ್‌ಡಿಕೆ ಗ್ರಾಮವಾಸ್ಥವ್ಯದ ಕಲ್ಪನೆ ಕುರಿತ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಹಲವು ಅನುಮಾನಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ.

ಮುಖ್ಯಮಂತ್ರಿಯ ಬಹಿರಂಗ ಪತ್ರದಲ್ಲಿ ಏನಿದೆ? ಇಲ್ಲಿದೆ ಓದಿ

ನಾನು ಗ್ರಾಮ ವಾಸ್ತವ್ಯ ಮಾಡುವೆನೆಂದು ಘೋಷಿಸಿದ ದಿನದಿಂದ ಮಾಧ್ಯಮಗಳಲ್ಲಿ ನಾನು 2006-07ರ ಅವಧಿಯಲ್ಲಿ ವಾಸ್ತವ್ಯ ಮಾಡಿದ ಗ್ರಾಮಗಳ ಸ್ಥಿತಿ-ಗತಿ, ಕುಟುಂಬಗಳ ಕುರಿತು ವರದಿಗಳನ್ನು ಪ್ರಕಟಿಸುತ್ತಿರುವುದನ್ನು ಗಮನಿಸುತ್ತಿರುವೆ. ಈ ಹಿನ್ನೆಲೆಯಲ್ಲಿ ಎರಡು ಮಾತು:

ಗ್ರಾಮ ವಾಸ್ತವ್ಯ ಎನ್ನುವುದು ಯಾವುದೇ ಜನಪ್ರಿಯತೆ ಗಿಟ್ಟಿಸುವ ಗಿಮಿಕ್ ಅಲ್ಲ. ಈ ಪರಿಕಲ್ಪನೆಯ ಮೂಲ ಪುರುಷನೂ ನಾನಲ್ಲ. ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಿದ್ದು ಆಕಸ್ಮಿಕವಾಗಿ, ಪ್ರವಾಹ ಪೀಡಿತ ಕೃಷ್ಣಾ ನದಿ ದಂಡೆಯ ಪಿ.ಕೆ. ನಾಗನೂರಿನಿಂದ ಎನ್ನುವುದು ನಿಮಗೆಲ್ಲಾ ತಿಳಿದ ವಿಚಾರ. ಗ್ರಾಮ ವಾಸ್ತವ್ಯ ಎಂಬ ಪದವನ್ನು ಚಾಲ್ತಿಗೆ ತಂದವರೂ ನಮ್ಮ ಮಾಧ್ಯಮ ಮಿತ್ರರೇ.

ಆದರೆ ಈ ಸಂದರ್ಭದಲ್ಲಿ ಜನರು ತೋರಿದ ಪ್ರೀತಿ, ವಿಶ್ವಾಸ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ. ಜನರ ಸಮಸ್ಯೆಗಳು, ಬದುಕಿನ ಕಟು ವಾಸ್ತವಗಳನ್ನು ಅರಿಯಲು ನೆರವಾಗಿದೆ. ಸರ್ಕಾರದಿಂದ ಆಗಬೇಕಾದ್ದು ಏನು ಎಂಬ ಬಗ್ಗೆ ನೇರ, ಸರಳವಾದ ಅತ್ಯುತ್ತಮ ಸಲಹೆಗಳೂ ಬಂದಿವೆ.

ಸಾರಾಯಿ ನಿಷೇಧ, ಲಾಟರಿ ನಿಷೇಧ, ಸಾಲ ಮನ್ನಾ, ಸಾವಿರಕ್ಕೂ ಹೆಚ್ಚು ಪ್ರೌಢಶಾಲೆಗಳು, ಐದುನೂರಕ್ಕೂ ಹೆಚ್ಚು ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆ, ಗ್ರಾಮಗಳ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆಯ ಸುವರ್ಣ ಗ್ರಾಮ ಯೋಜನೆ - ಇವೆಲ್ಲಾ ಗ್ರಾಮವಾಸ್ತವ್ಯದ ಫಲಶ್ರುತಿಗಳು. ನನ್ನ ಅಧಿಕಾರಾವಧಿಯ ನಂತರ ಸುವರ್ಣ ಗ್ರಾಮ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ಬಾರದೆ ಇರುವುದು ವಿಷಾದನೀಯ.

ಗ್ರಾಮ ವಾಸ್ತವ್ಯದ ಮುಖ್ಯ ಗುರಿ, ಆಡಳಿತ ಯಂತ್ರದ ಕಾರ್ಯವೈಖರಿ ಅರಿಯುವುದು. ಸರ್ಕಾರ ರೂಪಿಸಿದ ಯೋಜನೆ ಫಲಕಾರಿಯೇ, ಜನರ ಅಭಿಪ್ರಾಯವೇನು ಎಂಬುದನ್ನು ಅರಿಯುವುದು ಇದರ ಮೂಲ ಉದ್ದೇಶ. ಅಲ್ಲದೆ, ಗ್ರಾಮ ವಾಸ್ತವ್ಯದಲ್ಲಿ ಸುತ್ತಲಿನ ಗ್ರಾಮಗಳ ಜನರೂ ಸೇರುತ್ತಾರೆ. ಅವರಿಂದ ಅಹವಾಲು ಸ್ವೀಕರಿಸಿ ಪರಿಹರಿಸುತ್ತೇನೆ. ಕಾನೂನು ವ್ಯಾಪ್ತಿಯಲ್ಲಿ ಇವುಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಕೆಲವು ಮನವಿಗಳನ್ನು ಪರಿಗಣಿಸಲು ಸಾಧ್ಯವಾಗದೆ ಇರಬಹುದು. ಇಂಥವುಗಳನ್ನು ನೀವು ಮತ್ತೆ ಗಮನಕ್ಕೆ ತರುತ್ತಿದ್ದೀರಿ. ಖಂಡಿತವಾಗಿಯೂ ಅವುಗಳನ್ನು ಗಂಭೀರವಾಗಿ ಪರಿಶೀಲಿಸುವೆ. ಆ ಗ್ರಾಮದ ಅಭಿವೃದ್ಧಿ ಗ್ರಾಮ ವಾಸ್ತವ್ಯದ ಫಲಶ್ರುತಿಯ ಒಂದು ಭಾಗವಷ್ಟೆ. ಅದೇ ಕೇಂದ್ರ ಗುರಿಯಲ್ಲ.

ಜನರಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸಿದಾಗ ಅವು ಸಹಜವಾಗಿಯೇ ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದು ನನ್ನ ಅನುಭವ.

ಅಂತೆಯೇ ಎಚ್ಐವಿ ಪೀಡಿತ ಕುಟುಂಬವೊಂದರ ಮನೆಯಲ್ಲಿ ನಾನು ವಾಸ್ತವ್ಯ ಹೂಡಿದ್ದರಿಂದ ಆ ಕುಟುಂಬ ಊರನ್ನೇ ತೊರೆದಿದೆ ಎಂದು ವರದಿಯಾಗಿದೆ. ಇದು ನಿಜಕ್ಕೂ ದುರದೃಷ್ಣಕರ. ಎಚ್ಐವಿ ಬಗ್ಗೆ ಜನರಿಗಿರುವ ಅಂಧ ವಿಶ್ವಾಸವನ್ನು ದೂರ ಮಾಡುವ ಉದ್ದೇಶದಿಂದ ಏಡ್ಸ್‌ ನಿಯಂತ್ರಣ ಮಂಡಳಿ ಅಧಿಕಾರಿಗಳ ಮನವಿಯ ಮೇರೆಗೆ ಅಲ್ಲಿ ವಾಸ್ತವ್ಯ ಮಾಡಿದ್ದೆ. ಆದರೆ ಸಮಾಜ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎನ್ನುವುದು ನಿಜಕ್ಕೂ ಬೇಸರದ ಸಂಗತಿ. ಆದರೆ ವೈಯಕ್ತಿಕವಾಗಿಯೂ ನಾನು ಆ ಕುಟುಂಬಕ್ಕೆ ನೆರವಾಗಿದ್ದು, ಅದನ್ನು ಇಲ್ಲಿ ಚರ್ಚಿಸಲು ಹೋಗುವುದಿಲ್ಲ. ಆ ಕುಟುಂಬವನ್ನು ಸಂಪರ್ಕಿಸಿ ಹೇಗೆ ನೆರವಾಗಬಹುದು ಎಂದು ನಾನು ಪರಿಶೀಲಿಸುತ್ತೇನೆ.

ಮಾಧ್ಯಮಗಳು ಪ್ರಕಟಿಸುತ್ತಿರುವ ವರದಿಗಳಲ್ಲಿರುವ ಸಕಾರಾತ್ಮಕ ಸಲಹೆಗಳನ್ನು ಮುಕ್ತ, ಪ್ರಾಂಜಲ ಮನಸ್ಸಿನಿಂದ ಸ್ವೀಕರಿಸುವೆ. ಮುಂದಿನ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗುವುದನ್ನು ಅನುಸರಿಸಲು ಖಂಡಿತಾ ಪ್ರಯತ್ನಿಸುವೆ.

ಹೀಗೆ ಎಚ್‌.ಡಿ ಕುಮಾರಸ್ವಾಮಿ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT