ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ ಸ‌ದ್ಯಕ್ಕೆ ಮರೀಚಿಕೆ

Last Updated 13 ಡಿಸೆಂಬರ್ 2018, 20:15 IST
ಅಕ್ಷರ ಗಾತ್ರ

ಬೆಳಗಾವಿ: ರಾಜ್ಯದಲ್ಲಿ ಸಂಪುಟ ವಿಸ್ತರಣೆ ಸದ್ಯಕ್ಕೆ ಮರೀಚಿಕೆಯಾಗುವಂತೆ ಕಾಣುತ್ತಿದೆ. ಉತ್ತರದ ರಾಜ್ಯಗಳಲ್ಲಿ ಸರ್ಕಾರ ರಚನೆಯ ಕಸರತ್ತಿನಲ್ಲಿ ಹೈಕಮಾಂಡ್‌ ತೊಡಗಿರುವುದು ಹಾಗೂ ವಿಸ್ತರಣೆ ಮಾಡಿದರೆ ಭಿನ್ನಮತ ಉಲ್ಬಣವಾಗಬಹುದೆಂಬ ಭೀತಿಯೇ ಇದಕ್ಕೆ ಕಾರಣವಾಗಿದೆ.

ಅಧಿವೇಶನಕ್ಕೆ ಮುನ್ನ ನಡೆದಿದ್ದ ಜೆಡಿಎಸ್‌–ಕಾಂಗ್ರೆಸ್‌ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಸಂಪುಟ ವಿಸ್ತರಣೆ ಹಾಗೂ ನಿಗಮ–ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಮುಹೂರ್ತ ನಿಗದಿಯಾಗಿತ್ತು. ಬೆಳಗಾವಿ ಅಧಿವೇಶನದ ಕಲಾಪ ಸುಗಮವಾಗಿ ನಡೆಯಬೇಕು ಎಂಬ ಉದ್ದೇಶಕ್ಕೆ ಇಂತಹ ನಿರ್ಣಯ ಕೈಗೊಳ್ಳಲಾಗಿತ್ತು ಎಂಬ ಚರ್ಚೆ ಪಕ್ಷದ ಆಂತರಿಕ ವಲಯದಲ್ಲಿ ಜೋರಾಗಿದೆ.

‘ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು 21ರಂದು ಭೇಟಿಯಾಗಲಿದ್ದೇವೆ. ಇದೇ 22ರಂದು ಸಂಪುಟ ವಿಸ್ತರಣೆಯಾಗಲಿದೆ’ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ, ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುವ ಸಾಧ್ಯತೆಯೇ ಬಲವಾಗಿದೆ.

‘ರಾಹುಲ್ ಗಾಂಧಿ ಭೇಟಿಗೆ ಇದೇ 22ರಂದು ಸಮಯ ನಿಗದಿಯಾಗಿದೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರಖಂಡ್ರೆ, ಸಚಿವ ಡಿ.ಕೆ. ಶಿವಕುಮಾರ್ ಅವರು 21ರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ’ ಎಂದು ಕಾಂಗ್ರೆಸ್‌ ಮೂಲಗಳು ಖಚಿತಪಡಿಸಿವೆ.

ಈ ಬೆಳವಣಿಗೆಯಿಂದಾಗಿ ನಿಗದಿತ ದಿನದಂದು ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂಬುದು ಖಚಿತ ಎಂದೂ ಮೂಲಗಳು ಹೇಳಿವೆ.

ಉತ್ತರದ ಪ್ರಭಾವ: ಮಧ್ಯಪ್ರದೇಶ, ರಾಜಸ್ತಾನ ಹಾಗೂ ಛತ್ತೀಸಗಡದಲ್ಲಿ ಸರ್ಕಾರ ರಚನೆಯ ಒಂದು ಹಂತದ ಕೆಲಸ ಮುಗಿದಿದೆ. ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಹಾಗೂ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಕ್ತಾಯಗೊಂಡು ಸರ್ಕಾರ ರಚನೆಯಾಗಬೇಕು. ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಇನ್ನೂ ಸಂಪುಟದ ಗೊಂದಲ ಬಗೆಹರಿದಿಲ್ಲ. ಛತ್ತೀಸಗಡ ಬಿಟ್ಟು ಉಳಿದ ರಾಜ್ಯಗಳಲ್ಲಿ ಏಕಾಂಗಿಯಾಗಿ ಸರ್ಕಾರ ರಚಿಸುವಷ್ಟು ಬಹುಮತ ಕಾಂಗ್ರೆಸ್‌ಗೆ ಸಿಕ್ಕಿಲ್ಲ. ಅಲ್ಲಿಯೂ ಕರ್ನಾಟದ ಮಾದರಿಯ ತಕರಾರುಗಳೇ ತಲೆ ಎತ್ತುವ ಸಾಧ್ಯತೆಯಿದೆ. ಕನಿಷ್ಠ ಅಲ್ಲಿಯವರೆಗೂ ವರಿಷ್ಠರ ಚಿತ್ತ ಆ ರಾಜ್ಯಗಳ ಮೇಲೆ ಇರಲಿದೆ. ಈ ಕಾರಣಕ್ಕೆ ಸಚಿವ ಸ್ಥಾನ ಆಕಾಂಕ್ಷಿಗಳ ಬಯಕೆ ಸದ್ಯಕ್ಕೆ ಈಡೇರುವ ಲಕ್ಷಣಗಳಿಲ್ಲ ಎಂದು ನಾಯಕರೊಬ್ಬರು ಹೇಳಿದರು.

ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಜಟಾಪಟಿಯ ನಡುವೆಯೂ ನಡೆಯುತ್ತಿದೆ. ಲೋಕಸಭೆ ಚುನಾವಣೆಗೆ ಮುನ್ನ ಸಂಪುಟ ವಿಸ್ತರಣೆ ಮಾಡಿದರೆ ಭಿನ್ನಮತ ಭುಗಿಲೆದ್ದು ಚುನಾವಣೆಯ ಮೇಲೆ ಪರಿಣಾಮ ಬೀರಬಹುದು. ಉತ್ತರದ ಸೋಲಿನಿಂದ ಕಂಗೆಟ್ಟಿರುವ ಬಿಜೆಪಿ ಸದ್ಯಕ್ಕೆ ಆಪರೇಷನ್ ಕಮಲಕ್ಕೆ ಕೈ ಹಾಕುವುದಿಲ್ಲ. ಈ ಲೆಕ್ಕಾಚಾರವೂ ಸಂಪುಟ ವಿಸ್ತರಣೆಗೆ ತಡೆಯೊಡ್ಡುವ ಸಾಧ್ಯತೆ ಇದೆ ಎಂದು ಅವರು ವಿಶ್ಲೇಷಿಸಿದರು.

ಬೆಂಗಳೂರಿನತ್ತ ‘ಕೈ’ ಶಾಸಕರ ದೌಡು

ವಿದೇಶ ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಮರಳಿರುವ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಸಚಿವ ಸ್ಥಾನ ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಆಕಾಂಕ್ಷಿ ಕಾಂಗ್ರೆಸ್‌ ಶಾಸಕರು ಶುಕ್ರವಾರವೇ ತೆರಳಲಿದ್ದಾರೆ.

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿರುವ ಉತ್ತರ–ದಕ್ಷಿಣ ಭಾಗದ ಶಾಸಕರು ಕೂಡ ಗುಂಪು ಕಟ್ಟಿಕೊಂಡು ರಾಜಧಾನಿಯತ್ತ ಮುಖ ಮಾಡಿದ್ದಾರೆ. ಸಿದ್ದರಾಮಯ್ಯ ನಿವಾಸ ಮುಂದಿನ ಎರಡು ದಿನಗಳ ಕಾಲ ರಾಜಕೀಯ ಚಟುವಟಿಕೆಯ ಕೇಂದ್ರವಾಗಲಿದೆ ಎಂದೂ ಹೇಳಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT