ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿ.ಎಸ್.ಉಗ್ರಪ್ಪ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ. ಅದರ ಜತೆಗೆ, ಬಿ–ಫಾರಂ ಸಹ ನೀಡಿದೆ. ಬಮಖಂಡಿ ವಿಧಾನಸಭಾ ಕ್ಷೇತ್ರಕ್ಕೆ ಸಿದ್ದು ನ್ಯಾಮಗೌಡ ಪುತ್ರ ಆನಂದ ನ್ಯಾಮಗೌಡ ಅವರಿಗೆ ಟಿಕೆಟ್ ನೀಡಲಾಗಿದೆ.
ಇಬ್ಬರು ಅಭ್ಯರ್ಥಿಗಳ ಹೆಸರನ್ನು ಎಐಸಿಸಿ ಸೋಮವಾರ ಮಧ್ಯಾಹ್ನ ಪ್ರಕಟಿಸಿದೆ. ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನ.
ಬಳ್ಳಾರಿ ಟಿಕೆಟ್ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರು ಎರಡು ಗುಂಪುಗಳಾಗಿದ್ದರು. ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಅವರ ಸಹೋದರ ವೆಂಕಟೇಶ ಪ್ರಸಾದ್ ಅವರಿಗೆ ಟಿಕೆಟ್ ನೀಡಬೇಕು ಎಂಬುದು ಒಂದು ಗುಂಪಿನ ಒತ್ತಡವಾಗಿತ್ತು. ಇನ್ನೊಂದು ಬಣ ಇದಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಈ ಸಂಬಂಧ ಹಗ್ಗಜಗ್ಗಾಟ ನಡೆದಿತ್ತು. ಅಚ್ಚರಿಯ ಬೆಳವಣಿಗೆಯಲ್ಲಿ ವಿ.ಎಸ್.ಉಗ್ರಪ್ಪ ಅವರಿಗೆ ಪಕ್ಷ ಮಣೆ ಹಾಕಿದೆ. ಇಲ್ಲಿ ಶಾಸಕ ಬಿ.ಶ್ರೀರಾಮುಲು ಅವರ ಸಹೋದರಿ ಜೆ.ಶಾಂತಾ ಬಿಜೆಪಿ ಅಭ್ಯರ್ಥಿ.