ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರಿನ 40 ವರ್ಷದ ಮಹಿಳೆಯಲ್ಲಿ ಕೋವಿಡ್–19 ಸೋಂಕು ಇರುವುದು ಮಂಗಳವಾರ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮೆಕ್ಕಾ ಯಾತ್ರೆ ಕೈಗೊಂಡ ಗೌರಿಬಿದನೂರಿನ ನಾಲ್ಕು ಜನರಲ್ಲಿ ಆರಂಭದಲ್ಲಿ ಕೋವಿಡ್ ಪತ್ತೆಯಾಗಿತ್ತು. ಈ ಪೈಕಿ 72 ವರ್ಷದ ವೃದ್ದೆಯೊಬ್ಬರು ಮಾರ್ಚ್ 25 ರಂದು ಮೃತಪಟ್ಟಿದ್ದರು. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಪೈಕಿ ಈವರೆಗೆ ಆರು ಜನರಲ್ಲಿ ಸೋಂಕಿರುವುದು ದೃಢಪಟ್ಟಿದೆ.
ಸೋಂಕಿತರ ಪೈಕಿ ಸದ್ಯ ತಲಾ ಐದು ಜನರು ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗ ಸಂಸ್ಥೆಯಲ್ಲಿ ಮತ್ತು ಚಿಕ್ಕಬಳ್ಳಾಪುರದ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ರಾಜ್ಯ ಸರ್ಕಾರವು ಶನಿವಾರ ಗೌರಿಬಿದನೂರು ತಾಲ್ಲೂಕಿನವರೇ ಆದ ಸಕಾಲ ಮಿಷನ್ ಹೆಚ್ಚುವರಿ ನಿರ್ದೇಶಕ ಬಿ.ಎನ್.ವರಪ್ರಸಾದ್ ರೆಡ್ಡಿ ಅವರನ್ನು ಜಿಲ್ಲೆಗೆ ಕೋವಿಡ್ ಉಸ್ತುವಾರಿ ವಿಶೇಷ ಅಧಿಕಾರಿಯಾಗಿ ನಿಯೋಜನೆ ಮಾಡಿದೆ.