ಬೆಂಗಳೂರು: ಕೊರೊನಾ ವೈರಸ್ ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ ಏಳು ವರ್ಷಕ್ಕಿಂತ ಕಡಿಮೆ ಅವಧಿಗೆ ಶಿಕ್ಷೆ ವಿಧಿಸಬಹುದಾದ ಅಪರಾಧ ಕೃತ್ಯದಡಿಯ ವಿಚಾರಣಾಧೀನ ಕೈದಿಗಳಿಗೆ ಮಧ್ಯಂತರ ಜಾಮೀನು ನೀಡುವ ಪ್ರಕಿಯೆ ಆರಂಭವಾಗಿದೆ.
ರಾಜ್ಯದ ವಿವಿಧ ಜೈಲುಗಳಲ್ಲಿರುವ ಒಟ್ಟು 203 ವಿಚಾರಣಾಧೀನ ಕೈದಿಗಳಿಗೆ ಸ್ಥಳೀಯ ಜಿಲ್ಲಾ ನ್ಯಾಯಾಲಯಗಳು ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿವೆ.
ಬೀದರ್ 7, ದಾವಣಗೆರೆ 21, ಚಿತ್ರದುರ್ಗ 8, ಕೊಡಗು 11, ಧಾರವಾಡ 21, ವಿಜಯಪುರ 10, ಬಾಗಲಕೋಟೆ 23, ಮೈಸೂರು 70, ಮಂಡ್ಯ 14, ಚಿತ್ರದುರ್ಗ 18 ಮಂದಿ ವಿಚಾರಣಾಧೀನ ಕೈದಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಈ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜು ತಿಳಿಸಿದ್ದಾರೆ.