ಕುಣಿಗಲ್: ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೊದಲಿಗೆ ಮನೆಯಲ್ಲಿ ಕ್ವಾರಂಟೈನ್ ಇರುವುದಾಗಿ ತಿಳಿಸಿದ್ದ ಶಾಸಕರು, ಈಗ ನಿರ್ಧಾರ ಬದಲಿಸಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶುಕ್ರವಾರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆಯೇ ಅವರಿಗೆ ಅನಾರೋಗ್ಯದ ಲಕ್ಷಣಗಳು ಕಂಡು ಬಂದಿದ್ದವು. ತಮಗೆ ಕೊರೊನಾ ಸೋಂಕು ತಗುಲಿರಬಹುದು ಎಂದು ಶಾಸಕರೇ ಅನುಮಾನ ವ್ಯಕ್ತಪಡಿಸಿದ್ದರು. ನಂತರ ಕೋವಿಡ್–19 ಪರೀಕ್ಷೆಗೆ ಒಳಪಟ್ಟಿದ್ದು, ಸೋಮವಾರ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶುಕ್ರವಾರ ನಡೆದ ಸಭೆಯಲ್ಲಿ ತಹಶೀಲ್ದಾರ್ ವಿಶ್ವನಾಥ್, ಸಿಪಿಐ ನಿರಂಜನ್ ಕುಮಾರ್, ಟಿಎಚ್ಒ ಜಗದೀಶ್, ಇಒ ಶಿವರಾಜಯ್ಯ ಜತೆಗೆ ವೇದಿಕೆ ಹಂಚಿಕೊಂಡಿದ್ದರು.
ಚಿಂತೆ ಬೇಡ: ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಶಾಸಕ ಡಾ.ರಂಗನಾಥ್, ‘ಕ್ಷೇತ್ರದ ಜನರು ನನ್ನ ಬಗ್ಗೆ ಚಿಂತಿಸುವುದು ಬೇಡ. ತಮ್ಮ ಆರೋಗ್ಯದ ಬಗ್ಗೆ ಜಾಗೃತೆ ವಹಿಸಬೇಕು. ಯಾವುದೇ ಸಮಸ್ಯೆ ಇದ್ದರೂ ನನ್ನ ಗಮನಕ್ಕೆ ತರಬಹುದು. ಕ್ಷೇತ್ರದ ಜನರು, ಅಧಿಕಾರಿಗಳು ಸೇರಿದಂತೆ ಎಲ್ಲರಿಗೂ ದೂರವಾಣಿ ಸಂಪರ್ಕಕ್ಕೆ ಲಭ್ಯವಿರುತ್ತೇನೆ. ಆದರೆ, ಮುಂದಿನ 15 ದಿನ ಭೇಟಿ ಸಾಧ್ಯವಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.