ಚಿತ್ರದುರ್ಗ: ಕರ್ಫ್ಯೂ ನೆಪವಾಗಿಟ್ಟುಕೊಂಡು ಸೇವೆ ಸ್ಥಗಿತಗೊಳಿಸಿದ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್ಗಳು ಬಾಗಿಲು ತೆರೆಯಬೇಕು. ಇಲ್ಲವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಖಾಸಗಿ ಆಸ್ಪತ್ರೆಗಳು ಸೇವೆ ಒದಗಿಸದೇ ಇರುವ ಬಗ್ಗೆ ಹಲವು ದೂರುಗಳು ಬಂದಿವೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗಿದೆ. ವೈದ್ಯಕೀಯ ಸೇವೆ ಒದಗಿಸಬೇಕಾದ ಆಸ್ಪತ್ರೆಗಳು ಬಾಗಿಲು ಮುಚ್ಚುವುದು ಸರಿಯಲ್ಲ’ ಎಂದು ಹೇಳಿದರು.
‘ಕೊರೊನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಆಸ್ಪತ್ರೆ ಸೇರಿ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ವೈದ್ಯಕೀಯ ಸೇವೆ ನೀಡುವ ಹೊಣೆ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್ಗಳ ಮೇಲೆಯೂ ಇದೆ. ಜವಾಬ್ದಾರಿಯಿಂದ ನುಣಿಚಿಕೊಳ್ಳಲು ಯತ್ನಿಸಿದರೆ ದಂಡ ವಿಧಿಸಲಾಗುವುದು’ ಎಂದರು.