ಬೆಂಗಳೂರು: ‘ಲಾಕ್ಡೌನ್ ಸಡಿಲಿಸಿದ ಕಾರಣ ಎಲ್ಲ ಸರ್ಕಾರಿ ನೌಕರರು ಮಂಗಳವಾರದಿಂದ (ಮೇ 19) ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.
‘ಎಲ್ಲ ಸರ್ಕಾರಿ, ಅರೆ ಸರ್ಕಾರಿ, ಸ್ವಾಯತ್ತ ಸಂಸ್ಥೆ, ನಿಗಮ ಮಂಡಳಿ ಕಚೇರಿಗಳಲ್ಲಿ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಅಧಿಕಾರಿ, ಸಿಬ್ಬಂದಿ ಶೇ 100ರಷ್ಟು ಹಾಜರಾತಿ ಇರಬೇಕು’ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಲಾಕ್ಡೌನ್ ನಿರ್ಬಂಧ ಜಾರಿಯಲ್ಲಿದ್ದ ಕಾರಣಕ್ಕೆ ಈವರೆಗೆ ಅಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳ ಎಲ್ಲ ಸಿಬ್ಬಂದಿ, ಇತರ ಇಲಾಖೆಗಳ ಗ್ರೂಪ್ ಎ ಮತ್ತು ಬಿ ವೃಂದದ ಎಲ್ಲ ಅಧಿಕಾರಿಗಳು ಹಾಗೂ ಗ್ರೂಪ್ ಸಿ ಮತ್ತು ಡಿ ವೃಂದದ ಶೇ 33ರಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿತ್ತು.