ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ವೈರಸ್: ರಾಜ್ಯದಲ್ಲಿ ಒಂದೇ ದಿನ 16 ಪಾಸಿಟಿವ್ ಪ್ರಕರಣ

ನಿಜಾಮುದ್ದೀನ್‌ಗೆ ಹೋಗಿದ್ದ 16 ಮಂದಿಯಲ್ಲಿ ಸೋಂಕು ದೃಢ
Last Updated 5 ಏಪ್ರಿಲ್ 2020, 2:44 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಶನಿವಾರ ಒಂದೇ ದಿನ ಹೊಸದಾಗಿ 16 ಕೋವಿಡ್‌–19 ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 144ಕ್ಕೆ ತಲುಪಿದೆ.

ಮಾ.9ರಂದು ಬೆಂಗಳೂರಿನಲ್ಲಿ ವರದಿಯಾದ ಕೋವಿಡ್‌–19 ಪ್ರಕರಣ ರಾಜ್ಯದಾದ್ಯಂತ ವ್ಯಾಪಿಸಿಕೊಳ್ಳುತ್ತಿದ್ದು, ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಮೈಸೂರಿನಲ್ಲಿ 7, ಬೆಂಗಳೂರಿನಲ್ಲಿ 4, ಮಂಗಳೂರಿನಲ್ಲಿ 3, ಬಳ್ಳಾರಿ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ. ಸೋಂಕು ರಾಜ್ಯದ 16 ಜಿಲ್ಲೆಗಳಿಗೆ ಹರಡಿದೆ. ವಿದೇಶ ಪ್ರಯಾಣ ಮಾಡಿದವರು, ಅವ
ರೊಂದಿಗೆ ನೇರ ಸಂಪರ್ಕ ಹೊಂದಿರುವವರು ಹಾಗೂ ನಿಜಾಮುದ್ದೀನ್‌ಗೆ ತೆರಳಿದವರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ.

94 ಮಂದಿಯನ್ನು ಸೋಂಕು ಶಂಕೆ ಹಿನ್ನೆಲೆಯಲ್ಲಿ ಶನಿವಾರ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿಕೊಳ್ಳಲಾಗಿದೆ. 400 ಮಂದಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಸಂಗ್ರಹಿಸಲಾಗಿದೆ. 1,232 ಮಂದಿಯನ್ನು ಕ್ವಾರಂಟೈನ್‌ ಕೇಂದ್ರದಲ್ಲಿ ಹಾಗೂ 1,752 ಮಂದಿಯನ್ನು ಮನೆಯಲ್ಲಿಯೇ ಪ್ರತ್ಯೇಕಿಸಲಾಗಿದೆ. 129 ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, 43ನೇ ರೋಗಿಗೆ ಆಕ್ಸಿಜನ್‌ ಸಂಪರ್ಕ ಹಾಗೂ ರೋಗಿ –101 ಮತ್ತು 102ನೇ ರೋಗಿಯನ್ನು ವೆಂಟಿಲೇಟರ್‌ನಲ್ಲಿ ಇಡಲಾಗಿದೆ.‌

‘ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ತಬ್ಲೀಗ್ ಜಮಾತ್ ಕೇಂದ್ರ ಕಚೇರಿಗೆ ಹೋಗಿ ಬಂದವರಲ್ಲಿ ಈಗಾಗಲೇ 16 ಮಂದಿಗೆ ಸೋಂಕು ದೃಢಪಟ್ಟಿದೆ. ಇಂಡೊನೇಷ್ಯಾದಿಂದ 10 ಹಾಗೂ ಕಜಖ್‌ಸ್ತಾನ್‌ನಿಂದ 9 ಮಂದಿ ವಿದೇಶಿಯರು ಪಾಲ್ಗೊಂಡಿದ್ದರು. ಅವರಿಗೆ ಸೋಂಕು ತಗುಲಿಲ್ಲ ಎನ್ನುವುದು ವೈದ್ಯಕೀಯ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ರಾಜ್ಯದಲ್ಲಿ ಸೋಂಕಿಗೆ ಈವರೆಗೆ ನಾಲ್ವರು ಮೃತಪಟ್ಟಿದ್ದು, 11 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT