ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಒಂದೇ ದಿನ 2,627 ಮಂದಿಗೆ ಸೋಂಕು; 48 ಗಂಟೆಗಳಲ್ಲಿ 141 ಮಂದಿ ಸಾವು

ತೀವ್ರ ನಿಗಾ ಘಟಕದಲ್ಲಿ 532 ಮಂದಿ
Last Updated 12 ಜುಲೈ 2020, 21:19 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿನಿಂದ ಬಳಲಿದವರಲ್ಲಿ ಮತ್ತೆ 71 ಮಂದಿ ಭಾನುವಾರ ಮೃತಪಟ್ಟಿದ್ದಾರೆ. ಇದರಿಂದಾಗಿ ಕೋವಿಡ್‌ನಿಂದ ರಾಜ್ಯದಲ್ಲಿ ಸಾವಿಗೀಡಾದವರ ಸಂಖ್ಯೆ 684ಕ್ಕೆ ತಲುಪಿದೆ.

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಹೊಸದಾಗಿ 2,627 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಪರಿಣಾಮ ಸೋಂಕಿತರ ಸಂಖ್ಯೆ 38,843ಕ್ಕೆ ಏರಿಕೆಯಾಗಿದೆ. ಕೇವಲ 48 ಗಂಟೆಗಳಲ್ಲಿ 5,425 ಮಂದಿಗೆ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ 141 ಮಂದಿ ಕೋವಿಡ್‌ನಿಂದ ಮೃತಪಟ್ಟಿರುವುದು ಖಚಿತಪಟ್ಟಿದೆ. ಇನ್ನೊಂದೆಡೆ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಸದ್ಯ 532 ಮಂದಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾವಿನ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಒಂದೇ ದಿನ 20,050 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯ ರಾಜ್ಯದಲ್ಲಿ ಮರಣ ಪ್ರಮಾಣ ಶೇ 1.76 ರಷ್ಟಿದೆ. ಈ ಪ್ರಮಾಣ ಬೆಂಗಳೂರಿನಲ್ಲಿ ಶೇ 1.37 ರಷ್ಟಿದೆ. ಬೆಂಗಳೂರಿನಲ್ಲಿ 206 ಸೇರಿದಂತೆ 693 ಮಂದಿ ಒಂದೇ ದಿನ ಗುಣಮುಖರಾಗಿದ್ದಾರೆ.

16 ದಿನಗಳ ಮಗು ಸಾವು:ಬೆಂಗಳೂರಿನಲ್ಲಿ 45 ಮಂದಿ, ದಕ್ಷಿಣ ಕನ್ನಡದಲ್ಲಿ 5, ಮೈಸೂರು, ಹಾಸನ, ದಾವಣಗೆರೆ ಹಾಗೂ ಬೆಳಗಾವಿಯಲ್ಲಿ ತಲಾ 3 ಮಂದಿ, ಬಾಗಲಕೋಟೆ, ಹಾವೇರಿಯಲ್ಲಿ ತಲಾ ಇಬ್ಬರು, ಕೊಪ್ಪಳ, ತುಮಕೂರು, ಚಾಮರಾಜನಗರ, ವಿಜಯಪುರ ಹಾಗೂಧಾರವಾಡದಲ್ಲಿ ತಲಾ ಒಬ್ಬರು ಕೋವಿಡ್‌ಗೆ ಮೃತಪಟ್ಟಿರುವುದು ದೃಢಪಟ್ಟಿದೆ. ಬೆಂಗಳೂರಿನಲ್ಲಿ 16 ದಿನಗಳ ಮಗು ಹಾಗೂ 17 ವರ್ಷದ ಬಾಲಕಿ ಸಾವಿಗೀಡಾಗಿದ್ದಾರೆ. ಉಳಿದಂತೆ ಮೃತಪಟ್ಟವರಲ್ಲಿ ಬಹುತೇಕರು 50 ವರ್ಷ ಮೇಲ್ಪಟ್ಟವರಾಗಿದ್ದು, ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು.

ಬೆಂಗಳೂರಿನಲ್ಲಿ ಗರಿಷ್ಠ ಪ್ರಕರಣಗಳು ವರದಿಯಾಗಿದ್ದು, ಮತ್ತೆ 1,525 ಮಂದಿ ಕೋವಿಡ್ ಪೀಡಿತರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT