ಬೆಂಗಳೂರು: ಕೇಂದ್ರದ ಸಾಂಕ್ರಾಮಿಕ ಕಾಯಿಲೆ ಕಾಯ್ದೆ-1897ರ ಕೆಲವು ಕಲಂ ಹಾಗೂ ಕರ್ನಾಟಕ ಸಾಂಕ್ರಾಮಿಕ ಕಾಯಿಲೆ (ಕೋವಿಡ್-19ರ ನಿಯಂತ್ರಣ)-2020ರ ಸುಗ್ರೀವಾಜ್ಞೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ವಕೀಲೆ ತರ್ಜನಿ ದೇಸಾಯಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ನಿರ್ದೇಶಕ ಹಾಗೂ ಕೇಂದ್ರ ಕಾನೂನು ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಸೂಚಿಸಿ ವಿಚಾರಣೆ ಮುಂದೂಡಿದೆ.
'ಕೇಂದ್ರದ ಕಾಯ್ದೆ ನೂರು ವರ್ಷಕ್ಕೂ ಹಳೆಯದು. ಈ ಕಾಯ್ದೆಯ ಕೆಲವು ಕಲಂಗಳು ಮತ್ತು ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹಲವು ಅಂಶಗಳು ಮಾನವ ಹಕ್ಕು ಮತ್ತು ಮೂಲಭೂತ ಹಕ್ಕುಗಳಿಗೆ ತದ್ವಿರುದ್ಧ ಹಾಗೂ ಕಾನೂನು ಬಾಹಿರವಾಗಿವೆ' ಎಂಬುದು ಅರ್ಜಿದಾರರ ಆಕ್ಷೇಪ.