ಬೆಂಗಳೂರು: ಕೋವಿಡ್-19 ಕರ್ತವ್ಯಕ್ಕೆ ತೆರಳುವ ಆರೋಗ್ಯ ಕಾರ್ಯರ್ತರು ಹಾಗೂ ಇತರ ಸಿಬ್ಬಂದಿ ಜೊತೆಗೆ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಸಶಸ್ತ್ರ ಪೋಲಿಸರನ್ನು ನಿಯೋಜಿಸುವ ಬಗ್ಗೆ ರಾಜ್ಯದ ಎಲ್ಲಾ ಪೋಲಿಸ್ ಠಾಣೆಗಳಿಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಲಿಖಿತ ಹೇಳಿಕೆ ಸಲ್ಲಿಸಿದರು.
'ಆರೋಗ್ಯ ಕಾರ್ಯಕರ್ತರು ಹಾಗೂ ಸಿಬ್ಬಂದಿ ಕೋವಿಡ್-19 ಕರ್ತವ್ಯಕ್ಕೆ ತೆರಳುವ ಸ್ಥಳದ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆಯಲಾಗುತ್ತದೆ. ಅಲ್ಲಿನ ಪರಿಸ್ಥಿತಿಗೆ ಅನುಗುಣವಾಗಿ ಸಶಸ್ತ್ರ ಪೋಲಿಸರನ್ನು ನಿಯೋಜಿಸುವ ಬಗ್ಗೆ ಎಲ್ಲಾ ಪೋಲಿಸ್ ಠಾಣೆಗಳಿಗೆ ಸೂಚಿಸಲಾಗಿದೆ' ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.
'ಪಾದರಾಯನಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಜೆ ನಗರ ಠಾಣೆಯಲ್ಲಿ ಐದು ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. 126 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ' ಎಂದು ವಿವರಿಸಲಾಗಿದೆ.