ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಆಂಧ್ರಪ್ರದೇಶ ಮತ್ತು ತಮಿಳುನಾಡು ಕಡಲ ತೀರದಲ್ಲಿ ಚಂಡಮಾರುತ ಬೀಸಲಿದೆ. ಇದರಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗಂಟೆಗೆ 100 ರಿಂದ 115 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾನುವಾರ ಅಥವಾ ಸೋಮವಾರ ಶ್ರೀಲಂಕಾ, ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸಲಿದೆ. ಕೇರಳದ ಕಡಲ ತೀರದಲ್ಲೂ ಪ್ರಬಲ ಗಾಳಿ ಬೀಸಲಿದ್ದು, ಕರ್ನಾಟಕ ಕರಾವಳಿ ತೀರದಲ್ಲೂ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಈ ಸಂದರ್ಭದಲ್ಲಿ ಮೀನುಗಾರರು ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರ ಸ್ವರೂಪದ ವಾಯುಭಾರ ಕುಸಿತ ಚಂಡಮಾರುತಕ್ಕೆ ಕಾರಣವೆಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.