ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಪತ್ತೆ ಪ್ರಕರಣ: ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಜಾ

Last Updated 25 ಜೂನ್ 2019, 13:03 IST
ಅಕ್ಷರ ಗಾತ್ರ

ಬೆಂಗಳೂರು: ₹ 8.60 ಕೋಟಿಯಷ್ಟು ಲೆಕ್ಕವಿಲ್ಲದ ಹಣ ಪತ್ತೆ ಪ್ರಕರಣದ ಆರೋಪದಿಂದ ನನ್ನನ್ನು ಕೈಬಿಡಬೇಕು ಎಂದು ಕೋರಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ತಿರಸ್ಕರಿಸಿದೆ.

ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಸಂಜೆ 5.20ಕ್ಕೆ ಪ್ರಕಟಿಸಿದರು.

ಇದರಿಂದಾಗಿ ಶಿವಕುಮಾರ್ ಸೇರಿದಂತೆ ಪ್ರಕರಣದ ಉಳಿದ ಆರೋಪಿಗಳ ವಿರುದ್ಧ ಇದೇ ನ್ಯಾಯಾಲಯ ದೋಷರೋಪ ಪ್ರಕ್ರಿಯೆ ಆರಂಭಿಸಲಿದೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಈ ಹಿಂದಿನ ನ್ಯಾಯಾಧೀಶ ಬಿ.ವಿ.ಪಾಟೀಲ ಪ್ರಕರಣದಿಂದ ಮುಕ್ತಿ ನೀಡಿ ಆದೇಶಿಸಿದ್ದರು.

ಆದಾಯ ತೆರಿಗೆ ಇಲಾಖೆಯು ಭಾರತೀಯ ದಂಡ ಸಂಹಿತೆ (ಐಪಿಸಿ) ಕಲಂ 120–‘ಬಿ’ (ಅಪರಾಧಿಕ ಒಳಸಂಚು) ಅನುಸಾರ ದಾಖಲಿಸಿರುವ ದೂರು ಸರಿಯಾಗಿಯೇ ಇದೆ. ಇದರಲ್ಲಿ ಇನಿತೂ ಲೋಪವಿಲ್ಲ’ ಎಂಬ ಆದಾಯ ತೆರಿಗೆ ಇಲಾಖೆ ವಾದವನ್ನು ನ್ಯಾಯಾಧೀಶರು ಪುರಸ್ಕರಿಸಿದ್ದಾರೆ.

ಈ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್, ಸಚಿನ್‌ ನಾರಾಯಣ್, ಸುನಿಲ್ ಕುಮಾರ್ ಶರ್ಮ, ಎನ್‌.ರಾಜೇಂದ್ರ ಮತ್ತು ಆಂಜನೇಯ ಹನುಮಂತಯ್ಯ ಆರೋಪಿಗಳಾಗಿದ್ದಾರೆ.

‘ಶಿವಕುಮಾರ್ ಅವರು, ಆದಾಯ ತೆರಿಗೆ ಕಾಯ್ದೆ–1961ರ ಕಲಂ 276 ಸಿ (1) ಮತ್ತು 277ರ ಪ್ರಕಾರ ದಂಡನೀಯ ಅಪರಾಧ ಎಸಗಿದ್ದಾರೆ. ತನಿಖೆಯ ವೇಳೆ ಇನ್ನಷ್ಟು ಅಪರಾಧಗಳು ಬೆಳಕಿಗೆ ಬರಬಹುದು’ ಎಂಬುದು ಐ.ಟಿ. ವಾದ.

ಐ.ಟಿ‌ ಪರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT