ಮಂಗಳೂರು: ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಸತತ 6 ನೇ ಬಾರಿಗೆ ಸುಳ್ಯ ಕ್ಷೇತ್ರದಿಂದ ಜಯಗಳಿಸಿರುವ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಇದೀಗ ಅದು ಹುಸಿಯಾಗಿದ್ದು, ಪಕ್ಷದ ಮುಖಂಡರು ಹಾಗೂ ಶಾಸಕರಲ್ಲಿ ಅಸಮಾಧಾನ ಮೂಡಿಸಿದೆ.
ಸಂಘ ಪರಿವಾರ ಪ್ರಬಲವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಏಳರಲ್ಲಿ ಬಿಜೆಪಿ ಶಾಸಕರಿದ್ದಾರೆ. ಅಂಗಾರ ಅವರನ್ನು ಹೊರತುಪಡಿಸಿ ಉಳಿದವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಹೀಗಾಗಿ ಹಿರಿತನವನ್ನು ಪರಿಗಣಿಸಿ ಅಂಗಾರ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂಬ ಲೆಕ್ಕಾಚಾರ ಮಾಡಲಾಗಿತ್ತು.
ವಿಧಾನಸಭೆ ಚುನಾವಣೆ ನಂತರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರಿಂದ ಜಿಲ್ಲೆಯಲ್ಲಿ ಏಳು ಸ್ಥಾನ ಗೆದ್ದರೂ ಸಚಿವ ಸ್ಥಾನ ಖಾದರ್ ಅವರ ಪಾಲಾಗಿತ್ತು. ಇದೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಸಚಿವ ಸ್ಥಾನ ನೀಡದೇ ಇರುವುದು ಸರಿಯಲ್ಲ. ಜಿಲ್ಲೆಯ ಮತದಾರರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದು, ಇದೀಗ ಸಚಿವ ಸ್ಥಾನ ಸಿಗದೇ ಇರುವುದರಿಂದ ಜನರಿಗೆ ಹಾಗೂ ಕಾರ್ಯಕರ್ತರಿಗೆ ನಿರಾಸೆ ಉಂಟಾಗಿದೆ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.
ಈ ಮಧ್ಯೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಎಸ್. ಅಂಗಾರ, ನಾನು ಮೊದಲಿನಿಂದಲೂ ತತ್ವ, ಸಿದ್ಧಾಂತವನ್ನು ನಂಬಿಕೊಂಡು ರಾಜಕಾರಣ ಮಾಡುತ್ತಬಂದಿದ್ದೇನೆ. ತತ್ವ, ಸಿದ್ಧಾಂತಕ್ಕೆ ಬೆಲೆ ಇಲ್ಲದಂತಾದರೆ, ಏನು ಮಾಡಲು ಸಾಧ್ಯವಿಲ್ಲ. ಹಾಗಂತ ನಾನು ತತ್ವ ಸಿದ್ಧಾಂತ ಬಿಡುವ ಮನುಷ್ಯನಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ ಶಾಸಕರೂ ಆಗಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ಮಠಂದೂರು, ಜಿಲ್ಲೆಯ ಏಳೂ ಶಾಸಕರು, ಸಂಸದರು ಸೇರಿ ಚರ್ಚೆ ಮಾಡುತ್ತೇವೆ. ನಂತರ ಪಕ್ಷದ ಪ್ರಮುಖರಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.