ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ 19: ಮಾಧ್ಯಮಗಳ ಬದ್ಧತೆಯನ್ನು ಕೊಂಡಾಡಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು ವಿವಿಯಲ್ಲಿ ಪತ್ರಿಕಾ ದಿನಾಚರಣೆ
Last Updated 1 ಜುಲೈ 2020, 11:22 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ 19 ದಂತಹ ಸಮರಸ್ಥಿತಿಯಲ್ಲೂ ಪತ್ರಕರ್ತರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿರುವುದು ಸಮಾಜದ ಎಲ್ಲರಿಗೂ ಮಾದರಿಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯಿಂದ ವರ್ತಿಸಿ ಈ ಮಹಾಮಾರಿಯನ್ನು ತೊಲಗಿಸಬೇಕು ಎಂದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಎಲ್ಲರಿಗೂ ಹಿತವಚನ ಹೇಳಿದರು.

ಪತ್ರಿಕಾ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಂವಹನಾ ಹಾಗೂ ಪತ್ರಿಕೋದ್ಯಮ ವಿಭಾಗ ಏರ್ಪಡಿಸಿದ್ದ ಕಾರ್ಯಕ್ರಮವನ್ನು ವೆಬಿನಾರ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಕರ್ತರು ಅದರಲ್ಲೂ ಎಲ್ಲ ರೀತಿಯ ಮಾಧ್ಯಮಗಳು ಹೊಣೆಗಾರಿಕೆಯಿಂದ ಈ ಮಹಾಮಾರಿಯ ವಿರುದ್ಧ ಸೆಣಸಲು ಸರಕಾರಕ್ಕೆ ಹೆಗಲುಕೊಟ್ಟು ಕೆಲಸ ಮಾಡಿವೆ. ಅದರಲ್ಲೂ ಪತ್ರಕರ್ತ ಸಮುದಾಯ ತನ್ನ ಆರೋಗ್ಯವನ್ನು ಪಕ್ಕಕ್ಕಿಟ್ಟು ಜನರ ಕ್ಷೇಮಕ್ಕಾಗಿ ಹಗಲಿರುಳು ಕಾರ್ಯನಿರ್ವಹಿಸಿದ್ದು ನನ್ನನ್ನು ಮೂಕವಿಸ್ಮಿತನನ್ನಾಗಿ ಮಾಡಿದೆ ಎಂದು ಹೇಳಿದರು.

'ನಮ್ಮ ದೇಶವೂ ಎಲ್ಲ ಕ್ಷೇತ್ರಗಳಲ್ಲಿಯೂ ವೇಗವಾಗಿ ದಾಪುಗಾಲಿಡುತ್ತ ಜಗತ್ತಿನ ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಆರ್ಥಿಕವಾಗಿ, ರಾಜಕೀಯವಾಗಿ ಬಳಷ್ಟು ಪ್ರಭಾವಶಾಲಿ ದೇಶವಾಗಿದೆ. ಹೊಸ ಶತಮಾನದಲ್ಲಿ ಇಡೀ ಜಗತ್ತು ನಮ್ಮತ್ತ ನೋಡುತ್ತಿದೆ. ಈ ನಿಟ್ಟಿನಲ್ಲಿ ಮಾಧ್ಯಮಗಳು ನಿರ್ವಹಿಸುತ್ತಿರುವ ಪಾತ್ರ ಅವರ್ಣನೀಯ' ಎಂದು ಉಪ ಮುಖ್ಯಮಂತ್ರಿಗಳು ನುಡಿದರು.

'ಇಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ನಾವು ಮಾಧ್ಯಮವನ್ನು ಸ್ಮರಿಸಬೇಕು. ಕನ್ನಡದ ಮೊದಲ ಪತ್ರಿಕೆ ’ಮಂಗಳೂರು ಸಮಾಚಾರ್’ ಪತ್ರಿಕೆಯನ್ನು ಮಂಗಳೂರಿನಲ್ಲಿ 1843 ಜುಲೈ 1ರಂದು ಆರಂಭಿಸಲಾಗಿತ್ತು. ಜರ್ಮನಿಯ ಹರ್ಮನ್ ಫ್ರೆಡಿರಿಕ್ ಈ ಪತ್ರಿಕೆಯ ಪ್ರಥಮ ಸಂಪಾದಕರು. ಈ ಘಟನೆ ಚರಿತ್ರಾರ್ಹವೆಂದೇ ಪರಿಗಣಿಸಿ ಮಾಧ್ಯಮ ಅಕಾಡೆಮಿಯ ವತಿಯಿಂದ ಜುಲೈ 1ನ್ನು ಕನ್ನಡ ಪತ್ರಿಕೋದ್ಯಮದ ಪಾಲಿನ ಜನ್ಮದಿನವೆಂದು ಆಚರಿಸಲಾಗುತ್ತಿದೆ. ಕನ್ನಡ ಪತ್ರಿಕೋದ್ಯಮಕ್ಕೆ 177 ವರ್ಷಗಳ ಭವ್ಯ ಇತಿಹಾಸವಿದೆ. ಈ ರೀತಿಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನನಗೆ ಅತೀವ ಸಂತಸ ಉಂಟು ಮಾಡಿದೆ' ಎಂದು ಅವರು ನುಡಿದರು.

'ದೇಶದ ಹೊರಗಿನ ಮತ್ತು ಒಳಗಿನ ಶತ್ರುಗಳನ್ನು ಸೆದೆಯಡಿಯುವಲ್ಲಿ ನಮ್ಮ ಮಾಧ್ಯಮಗಳು ನಿಷ್ಠುರವಾಗಿ ವರ್ತಿಸಿವೆ. ಚೀನಾ, ಪಾಕಿಸ್ತಾನ ಉಂಟು ಮಾಡುತ್ತಿರುವ ಉಪಟಳವನ್ನು ಕಾಲಕಾಲಕ್ಕೆ ಮಾಧ್ಯಮಗಳು ಚಾಕಚಕ್ಯತೆಯಿಂದ ವರದಿ ಮಾಡುತ್ತಿವೆ. ಆ ದೇಶಗಳ ಕುಟಿಲತೆಯನ್ನು ಬಟಾಬಯಲು ಮಾಡುತ್ತಿವೆ. ಅಷ್ಟೇ ಅಲ್ಲದೆ, ಚೀನಾ ವಿರುದ್ಧ ಎಲ್ಲ ಬಗೆಯ ಹೋರಾಟಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಇದಕ್ಕಾಗಿ ಮಾಧ್ಯಮಗಳನ್ನು ನಾನು ಅಭಿನಂದಿಸುತ್ತೇನೆ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

'ಭಾರತದಲ್ಲಿ ಮಾಧ್ಯಮ ಜಗತ್ತು ಬಹಳ ಗಟ್ಟಿಯಾಗಿದೆ. ಜನರ ಆಶೋತ್ತರಗಳಿಗೆ ತಕ್ಕಂತೆ ಕೆಲಸ ಮಾಡುತ್ತಿರುವ ಕ್ಷೇತ್ರವು ನಮ್ಮ ಶ್ರೇಷ್ಟ ಸಂವಿಧಾನದ ನಾಲ್ಕನೇ ಆಧಾರ ಸ್ತಂಭ. ಈ ನಿಟ್ಟಿನಲ್ಲಿ ಭಾರತದ ಮಟ್ಟಿಗೆ ಮಾಧ್ಯಮಕ್ಕೆ ಬಹಳ ಪೂಜನೀಯ ಸ್ಥಾನಮಾನವಿದೆ. ಭಾರತದ ಮಾಧ್ಯಮ, ಜಗತ್ತಿನಲ್ಲಿಯೇ ಅತಿ ದೊಡ್ಡ ಮಾಧ್ಯಮ ಕ್ಷೇತ್ರವಾಗಿದೆ. ಸಂವಿಧಾನದ ನಾಲ್ಕನೇ ಅಂಗ. ನಮ್ಮ ದೇಶದಲ್ಲಿ 5,000ಕ್ಕೂ ಹೆಚ್ಚು ಸುದ್ದಿಪತ್ರಿಕೆಗಳಿವೆ. 1000ಕ್ಕೂ ಹೆಚ್ಚು ಮ್ಯಾಗಝಿನ್ ಗಳಿವೆ, 450 ಸುದ್ದಿ ವಾಹಿನಿಗಳಿವೆ. 200 ಕ್ಕೂ ಹೆಚ್ಚು ನ್ಯೂಸ್ ಪೋರ್ಟಲ್ಲುಗಳಿವೆ. ಒಂದು ಅಂದಾಜಿನ ಪ್ರಕಾರ 72,000 ಕೋಟಿಯಷ್ಟು ವಾರ್ಷಿಕ ಜಾಹೀರಾತು ಆದಾಯವಿದೆ. ಹೀಗಾಗಿ ನಮ್ಮಲ್ಲಿ ಮಾಧ್ಯಮ ಕ್ಷೇತ್ರ ಬಲಿಷ್ಠವಾಗಿದ್ದು, ಅದು ಎದುರಿಸುತ್ತಿರುವ ಸವಾಲುಗಳಿಗೆ ಸೂಕ್ತ ಪರಿಹಾರೋಪಾಯಗಳನ್ನು ಕಂಡುಕೊಳ್ಳಬೇಕಿದೆ' ಎಂದು ಡಿಸಿಎಂ ಆಶಿಸಿದರು.

ವೆಬಿನಾರಿನಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ. ಎಸ್.ಜಾಫೆಟ್, ಹಿಂದೂ ಪತ್ರಿಕೆಯ ಬೆಂಗಳೂರು ಬ್ಯೂರೋ ಮುಖ್ಯಸ್ಥೆ ಎಸ್. ಬಾಗೇಶ್ರೀ, ವಿವಿಯ ಸಂವಹನಾ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ. ನರಸಿಂಹಮೂರ್ತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT