ನವದೆಹಲಿ: 'ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಸಂಜೆ ಭೇಟಿ ಮಾಡಿ ರಾಜ್ಯ ರಾಜಕಿಯ ವಿದ್ಯಮಾನಗಳ ಕುರಿತು ಚರ್ಚಿಸುವೆ' ಎಂದು ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಮಧ್ಯಾಹ್ನ ಇಲ್ಲಿನ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನಿಧನರಾದ ಜಾರ್ಜ್ ಫರ್ನಾಂಡೀಸ್ ಅವರ ಪಾರ್ಥಿವ ಶರೀರಕ್ಕೆ ಅಂತಿಮನಮನ ಸಲ್ಲಿಸಿದ ಬಳಿಕ ರಾಹುಲ್ ಭೇಟಿಗೆ ತೆರಳುವುದಾಗಿ ಹೇಳಿದರು.
ಸರ್ಕಾರ ಸುಭದ್ರವಾಗಿದೆ. ಯಾವುದೇ ರೀತಿಯ ಗೊಂದಲಗಳಿಲ್ಲ. ಒಬ್ಬರು ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತ ಹೋದರೆ ಅದಕ್ಕೆ ಅಂತ್ಯವೇ ಇರದು ಎಂದು ಅವರು ಅಭಿಪ್ರಾಯಪಟ್ಟರು.
ಬಿಜೆಪಿಯವರು ಕಳೆದ ಎಂಟು ತಿಂಗಳಿಂದ ಆಪರೇಷನ್ ಮಾಡುವುದರಲ್ಲೇ ನಿರತರಾಗಿದ್ದಾರೆ. ಅವರಿಗೆ ಮಾಡಲು ಬೇರೆ ಕೆಲಸವಿಲ್ಲ ಎಂದು ಅವರು ಟೀಕಿಸಿದರು.