ಚಿತ್ರದುರ್ಗ: ಬಿಜೆಪಿ ಮಣಿಸಲು ಪ್ರತ್ಯೇಕ ಪಕ್ಷ ಕಟ್ಟಿ ಹೋರಾಡಿದ ಬಿ. ಶ್ರೀರಾಮುಲು ಅವರನ್ನು ಸೋಲಿಸಲು ಸಾಧ್ಯವೇ ಇಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಸುದ್ದಿಗಾರರ ಜೊತೆ ಸೋಮವಾರ ಇಲ್ಲಿ ಮಾತನಾಡಿದ ಅವರು, ‘ಶ್ರೀರಾಮುಲು ದೊಡ್ಡವರು. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ’ಎಂದು ಪ್ರತಿಕ್ರಿಯೆ ನೀಡಿದರು.
‘ನನಗೆ ವರ್ಚಸ್ಸಿಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. ವರ್ಚಸ್ಸು, ಅಧಿಕಾರ ಇದೆ ಎಂದು ನಾನು ಎಲ್ಲೂ ಹೇಳಿಲ್ಲ’ ಎಂದರು.
ಕೆ.ಆರ್.ನಗರ ವರದಿ: ಪ್ರಕೃತಿಯಲ್ಲಿ ಹಾವು– ಮುಂಗುಸಿ ಒಂದಾದ ಉದಾಹರಣೆ ಇಲ್ಲ. ಅದೇ ರೀತಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಎಂದೂ ಒಂದಾಗುವುದಿಲ್ಲ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಸೋಮವಾರ ಕಾರ್ಯಕರ್ತರ ಸಭೆಯಲ್ಲಿ ಹೇಳಿದರು.
ಮಾಧ್ಯಮಗಳನ್ನು ಬೆದರಿಸುವ ಮೋದಿ–ಆರೋಪ: (ಶಿವಮೊಗ್ಗ ವರದಿ):ಕೇಂದ್ರ ಸರ್ಕಾರದ ಕಾರ್ಯವೈಖರಿ ವಿರುದ್ಧ ಧ್ವನಿ ಎತ್ತುವ ಮಾಧ್ಯಮಗಳನ್ನು ಹತ್ತಿಕ್ಕುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ–ಅಮಿತ್ ಶಾ ಜೋಡಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದರು.
ಮೋದಿ ವಿರುದ್ಧ ಟೀಕೆ ಮಾಡುವ ಮಾಧ್ಯಮ ಸಂಸ್ಥೆಗಳ ಮೇಲೆ ದಾಳಿ ನಡೆಯುತ್ತಿದೆ. ಹೆದರಿಕೆಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ. ವಿರೋಧಿಗಳಿಗೆ ಹಿಂಸೆ ನೀಡುವುದು, ಬ್ಲ್ಯಾಕ್ಮೇಲ್ ಮಾಡುವುದು ಅವರ ಪ್ರಮುಖ ಕೆಲಸ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.