ಬೆಂಗಳೂರು: ‘ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡುವ ವಿಷಯದಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
‘ನಮ್ಮದು ಜಾತ್ಯತೀತ ಪಕ್ಷ. ಹೀಗಾಗಿ, ಬಿಜೆಪಿ ಜೊತೆಗೆ ಹೊಂದಾಣಿಕೆ ಅಸಾಧ್ಯ. ಜೆಡಿಎಸ್ಗೆ ಬೆಂಬಲ ನೀಡುವ ಕುರಿತಾಗಿ ಹೈಕಮಾಂಡ್ ನಿರ್ಧರಿಸಲಿದೆ’ ಎಂದರು.
ರಾಜ್ಯಸಭೆ ಚುವಾಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಹೆಸರು ಘೋಷಣೆಯಾಗಿದೆ. ಕಾಂಗ್ರೆಸ್ನಲ್ಲಿರುವ ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಆದರೆ, ಈ ಕುರಿತು ಪಕ್ಷ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.
ಖರ್ಗೆ ನಾಮಪತ್ರ ಸಲ್ಲಿಗೆ ವೇಳೆ ಬರಬೇಡಿ: ‘ರಾಜ್ಯಸಭೆ ಚುನಾವಣೆಗೆ ಪಕ್ಷದ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಬರಬಾರದು’ ಎಂದು ಡಿ.ಕೆ. ಶಿವಕುಮಾರ್ ಮನವಿ ಮಾಡಿದರು.
‘ಕೊರೊನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದರೆ ಸಮಸ್ಯೆ ಉಂಟಾಗಲಿದೆ. ಹೀಗಾಗಿ, ನಾಮಪತ್ರ ಸಲ್ಲಿಕೆ ವೇಳೆ ಶಾಸಕರಿಗೆ ಮಾತ್ರ ಅವಕಾಶ ನೀಡಲಾಗುವುದು’ ಎಂದರು.