ಬೆಂಗಳೂರು: ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಬುಧವಾರ ಭೇಟಿಯಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ಗುಪ್ತ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಸದಾಶಿವನಗರ ಮನೆಯಲ್ಲಿ ಭೇಟಿಯಾಗಿ ಹೊನ್ನಾಳಿ ಚನ್ನಪ್ಪಸ್ವಾಮಿ ಮಠದಲ್ಲಿ ಮಾರ್ಚ್ 5ರಿಂದ ನಡೆಯಲಿರುವ ಕೃಷಿ ಮೇಳಕ್ಕೆ ಆಹ್ವಾನ ನೀಡಿದರು.ಹರಿಹರ ಮಾಜಿ ಶಾಸಕ ಬಿ.ಪಿ.ಹರೀಶ್ ಸಹ ಇದ್ದರು.
ಈ ಸಂದರ್ಭದಲ್ಲಿ ಶಿವಕುಮಾರ್, ಸಹೋದರ ಹಾಗೂ ಸಂಸದ ಡಿ.ಕೆ.ಸುರೇಶ್, ರೇಣುಕಾಚಾರ್ಯ ಗುಪ್ತವಾಗಿ ಮಾತುಕತೆ ನಡೆಸಿದರು. ಪ್ರಸ್ತುತ ರಾಜಕೀಯ ವಿದ್ಯಮಾನಗಳು, ಸಚಿವ ಸ್ಥಾನಕ್ಕೆ ಪ್ರಯತ್ನ ನಡೆಸಿರುವ ಸಿ.ಪಿ.ಯೋಗೇಶ್ವರ ಅವರಿಗೆ ಸಂಬಂಧಿಸಿದ ವಿಚಾರಗಳು ಚರ್ಚೆಯಾದವು ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಮಂಗಳವಾರ ಭೇಟಿಯಾಗಿ ಕೃಷಿ ಮೇಳಕ್ಕೆ ರೇಣುಕಾಚಾರ್ಯ ಆಹ್ವಾನ ನೀಡಿದ್ದರು.
ಜೆಡಿಎಸ್ ಶಾಸಕ ಭೇಟಿ:
ನಾಗಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಸುರೇಶ್ಗೌಡ ಸಹ ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದು, ಆ ಪಕ್ಷದಿಂದಲೇ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರ ಜತೆಗೆ ಅಂತರ ಕಾಯ್ದುಕೊಂಡಿದ್ದರು. ಹಾಗಾಗಿ ಇವರ ಭೇಟಿ ಮಹತ್ವ ಪಡೆದುಕೊಂಡಿದೆ.