ನವದೆಹಲಿ:ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ (ಇ.ಡಿ)ದಿಂದ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರು ಜಾಮೀನು ಕೋರಿ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇ.ಡಿ.ಗೆ ನೋಟಿಸ್ ಜಾರಿ ಮಾಡಿದೆ.
ಸೋಮವಾರ ನಡೆದ ವಿಚಾರಣೆಯ ವೇಳೆ ಶಿವಕುಮಾರ್ ಪರ ವಕೀಲ ದಯಾಕೃಷ್ಣನ್ ಅವರ ವಾದ ಆಲಿಸಿದ ನ್ಯಾಯಮೂರ್ತಿ ಸುರೇಶಕುಮಾರ್ ಕೈತ್, ವಿಚಾರಣೆಯನ್ನು ಅ. 14ಕ್ಕೆ ಮುಂದೂಡಿದರಲ್ಲದೆ, ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಇ.ಡಿ.ಗೆ ಸೂಚಿಸಿ ನೋಟಿಸ್ ಜಾರಿ ಮಾಡಿದರು.
ಆರೋಗ್ಯ ಸಮಸ್ಯೆ ಇರುವುದರಿಂದ ಜಾಮೀನು ನೀಡುವಂತೆ ಕೋರಿರುವ ಶಿವಕುಮಾರ್, ‘ನಾನು ದೇಶ ಬಿಟ್ಟು ಪಲಾಯನ ಮಾಡುವ ಸಾಧ್ಯತೆ ಇಲ್ಲ’ ಎಂದು ಹೇಳಿದ್ದಾರೆ.
ಸೆ. 3ರಂದು ಬಂಧನಕ್ಕೆ ಒಳಗಾಗಿ ತಿಹಾರ್ ಕೇಂದ್ರ ಕಾರಾಗೃಹದಲ್ಲಿ ಇರುವ ಶಿವಕುಮಾರ್ ಅವರ 14 ದಿನಗಳ ನ್ಯಾಯಾಂಗ ಬಂಧನದ ಅವಧಿ ಅ. 1 ರಂದು ಮಂಗಳವಾರ ಪೂರ್ಣಗೊಳ್ಳಲಿದೆ. ಇ.ಡಿ. ವಿಶೇಷ ನ್ಯಾಯಾಲಯವು ಸೆ. 25ರಂದು ಅವರ ಜಾಮೀನು ಅರ್ಜಿ ಯನ್ನು ವಜಾಗೊಳಿಸಿತ್ತು. ಈ ಆದೇಶ ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿದೆ.