ಬೆಳಗಾವಿ: ‘ಕಾಂಗ್ರೆಸ್– ಜೆಡಿಎಸ್ ಶಾಸಕರ ರಾಜೀನಾಮೆ ಪತ್ರ ಹರಿಯಲು ಪ್ರಯತ್ನಿಸುವ ಮೂಲಕ ಸಚಿವ ಡಿ.ಕೆ. ಶಿವಕುಮಾರ್ ಗೂಂಡಾ ವರ್ತನೆ ತೋರಿದ್ದಾರೆ. ಅವರ ಮೇಲೆ ಗೂಂಡಾಗಳನ್ನು ಬಿಟ್ಟು, ಹಲ್ಲೆ ಮಾಡಿಸುವ ಸಾಧ್ಯತೆ ಇದೆ. ರಾಜೀನಾಮೆ ನೀಡಿರುವ ಶಾಸಕರಿಗೆ ರಾಜ್ಯಪಾಲರು ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಡಿ.ಕೆ. ಶಿವಕುಮಾರ್ ವಿರುದ್ಧ ನಾನು ಹಿಂದೊಮ್ಮೆ ಹೇಳಿದ್ದೆ. ಆಗ ಬೆಂಗಳೂರಿನಲ್ಲಿ ನನ್ನ ವಿರುದ್ಧ ಗೂಂಡಾಗಳನ್ನು ಬಿಟ್ಟು ಹಲ್ಲೆ ನಡೆಸಲು ಯತ್ನಿಸಿದ್ದರು. ಅವರ ಗೂಂಡಾ ವರ್ತನೆ ಇದೇ ರೀತಿ ಮುಂದುವರಿದರೆ ನಾವು ಅಧಿಕಾರಕ್ಕೆ ಬಂದಾಗ ಕ್ರಮಕೈಗೊಳ್ಳುತ್ತೇವೆ’ ಎಂದು ಎಚ್ಚರಿಕೆ ನೀಡಿದರು.
‘ಶಾಸಕರ ರಾಜೀನಾಮೆಯಲ್ಲಿ ಬಿಜೆಪಿಯವರ ಕೈವಾಡ ಇಲ್ಲ. ಅವರಲ್ಲಿಯೇ ಅಸಮಾಧಾನ ಮೂಡಿ, ರಾಜೀನಾಮೆ ನೀಡುತ್ತಿದ್ದಾರೆ. ಒಬ್ಬರಾದ ಮೇಲೆ ಒಬ್ಬರು ಸರದಿಯಲ್ಲಿ ರಾಜೀನಾಮೆ ನೀಡುವುದನ್ನು ನೋಡಿದರೆ, ರಾಜ್ಯದಲ್ಲಿ ಬಿಜೆಪಿಯೊಂದೇ ಪಕ್ಷ ಉಳಿಯುವುದೇ ಎನ್ನುವ ಅನುಮಾನ ಕಾಡುತ್ತಿದೆ’ ಎಂದು ಛೇಡಿಸಿದರು.
‘ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಮೆರಿಕದಿಂದಲೇ ರಾಜ್ಯಪಾಲರಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಸಲ್ಲಿಸಲಿ’ ಎಂದರು.