ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರ ವೇತನ ಕಡಿತ ಮಾಡಬಾರದು: ಡಿ.ಕೆ ಶಿವಕುಮಾರ್‌ ಆಗ್ರಹ 

Last Updated 7 ಏಪ್ರಿಲ್ 2020, 9:20 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ ಮುಂದುವರಿದರೆ ಸರ್ಕಾರಿ ನೌಕರರ ವೇತನ ಕಡಿತ ಮಾಡುವ ಕುರಿತ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪ್ರಸ್ತಾವಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಸಂಬಳ ನೀಡದಷ್ಟು ದರಿದ್ರವಿಲ್ಲ ಎಂದು ಅವರು ಹೇಳಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಡಿ.ಕೆ ಶಿವಕುಮಾರ್‌ ಹಲವು ವಿಚಾರಗಳನ್ನು ಪ್ರಸ್ತಾಪಿಸಿದರು. ‘ಏಪ್ರಿಲ್ 14ರ ನಂತರ ಲಾಕ್ ಡೌನ್ ಮುಂದುವರಿದರೆ ಸರ್ಕಾರಿ ನೌಕರರ ವೇತನ ಕಡಿತಗೊಳಿಸುವ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ಎಲ್ಲ ಇಲಾಖೆಗಳ ಸಿಬ್ಬಂದಿ ವೇತನ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಸರ್ಕಾರಿ ಸಿಬ್ಬಂದಿಗಳಿಗೆ ಸಂಬಳ ನೀಡದಿರುವಷ್ಟರ ಮಟ್ಟಿಕೆ ಸರ್ಕಾರಕ್ಕೆ ದಾರಿದ್ರ ಬಂದಿಲ್ಲ. ಅವರಿಗೆ ಕೆಲಸ ಮಾಡಬೇಡಿ ಅಂತಾ ನಾವು ಹೇಳಿದ್ದೇವೆ. ಹೀಗಾಗಿ ಅವರ ಸಂಬಳ ನೀಡದಿರುವುದು ಸರಿಯಲ್ಲ. ಅವರು ಮನೆಯಲ್ಲೇ ಇದ್ದರೂ ಅವರಿಗೆ ಮನೆ ಬಾಡಿಗೆ, ಇಎಂಐ, ಸಾಲದ ಬಡ್ಡಿ ಸೇರಿದಂತೆ ಅನೇಕ ಖರ್ಚುಗಳಿವೆ. ಈಗಾಗಲೇ ನಾವು ಹೇಳಿರುವಂತೆ ಸರ್ಕಾರ ಬೇಕಾದರೆ ಕೆಲವು ಯೋಜನೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಿ. ಆ ದುಡ್ಡನ್ನು ಈ ಕಾರ್ಯಕ್ಕೆ ಬಳಸಿಕೊಳ್ಳಲಿ. ಸದ್ಯ ಜನರು ನೆಮ್ಮದಿಯಾಗಿ ಉಸಿರಾಡಿ ಜೀವನ ನಡೆಸುವಂತೆ ಮಾಡುವುದು ಮುಖ್ಯ. ಹೀಗಾಗಿ ಯಾವುದೇ ಕಾರಣಕ್ಕೂ ಸರ್ಕಾರಿ ಸಿಬ್ಬಂದಿಗಳ ವೇತನ ನಿಲ್ಲಿಸಬಾರದು,’ ಎಂದು ಆಗ್ರಹಿಸಿದರು.

ಸಾಮಾಜಿಕ ಮಾಧ್ಯಮ ದುರ್ಬಳಕೆಗೆ ಆಕ್ಷೇಪ

ಸಾಮಾಜಿಕ ಮಾಧ್ಯಮಗಳ ದುರ್ಬಳಕೆ ಮಾಡಿಕೊಂಡು ಕೆಲವು ಕಿಡಿಗೇಡಿಗಳು ಒಂದು ಕೋಮಿನ ವಿರುದ್ಧ ಅಪಪ್ರಚಾರ ಮಾಡಿ ಸಮಾಜದಲ್ಲಿ ಶಾಂತಿ ಭಂಗ ಮಾಡಲು ಪ್ರಯತ್ನಿಸುತ್ತಿದ್ದಾರೆ. ಕೆಲವು ಊರುಗಳಲ್ಲಿ ಈ ಸಮುದಾಯದವರನ್ನು ಗಡಿಪಾರು ಮಾಡುವ ಹಾಗೂ ಸಾಮಾಜಿಕವಾಗಿ ಬಹಿಷ್ಕಾರ ಹಾಕುವ ಮಟ್ಟಕ್ಕೆ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಈ ವಿಚಾರವಾಗಿ ನಿನ್ನೆ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯನ್ನು ನಾನು ಅಭಿನಂದಿಸುತ್ತೇನೆ. ಅವರ ಹೇಳಿಕೆ ಕೇವಲ ಮಾತಿಗೆ ಮಾತ್ರ ಸೀಮಿತವಾಗಬಾರದು. ಅದು ಗ್ರಾಮಪಂಚಾಯ್ತಿ ಮಟ್ಟಕ್ಕೂ ತಲುಪಬೇಕು. ಮುಖ್ಯಮಂತ್ರಿಗಳು ಹಾಗೂ ಅವರ ಪಕ್ಷದ ಹೆಸರು ಹೇಳಿಕೊಂಡೇ ಈ ಅಪಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಸರ್ಕಾರ ಸೈಬರ್ ಕ್ರೈಮ್ ವಿಭಾಗವನ್ನು ಬಳಸಿಕೊಂಡು ಈ ರೀತಿ ಅಪಪ್ರಚಾರ ಮಾಡುತ್ತಿರುವವರನ್ನು ಪತ್ತೆ ಹಚ್ಚಬೇಕಿದೆ. ಇದರ ಜೊತೆಗೆ ಈ ಕೃತ್ಯ ಮಾಡಿದವರನ್ನು ಬಂಧಿಸಿ ಜೈಲಿಗೆ ಹಾಕಬೇಕು. ಈ ವಿಚಾರವಾಗಿ ಇಂದು ಸಂಜೆಯೊಳಗಾಗಿ ಮುಖ್ಯಮಂತ್ರಿಗಳು ಸೂಚನೆ ಹೊರಡಿಸಬೇಕು, ಅಥವಾ ವಾಟ್ಸಪ್ ಗಳಲ್ಲಿ ವಿಡಿಯೋ ಮೂಲಕ ಈ ರೀತಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂದೇಶ ರವಾನಿಸಬೇಕು ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಎಲ್ಲಿದ್ದಾರೆ?

‘ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಮಲಗಿದೆ. ಈ ಇಲಾಖೆ ಸಚಿವರು ಎಲ್ಲಿದ್ದಾರೋ ಗೊತ್ತಿಲ್ಲ. ಬೇಸಿಗೆ ಆರಂಭವಾಗಿದ್ದು, ಬರ ಎದುರಾಗುವ ಪರಿಸ್ಥಿತಿ ಇದೆ. ಈ ಹಂತದಲ್ಲಿ ಹಳ್ಳಿಗಳಲ್ಲಿ ಜನರಿಗೆ ಆರೋಗ್ಯಕರ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕಿದೆ. ಇನ್ನು ನರೇಗಾ ಉದ್ಯೋಗ ಖಾತ್ರೆ ಯೋಜನೆ ಮುಂದುವರಿಸಿ ದಿನಕ್ಕೆ 275 ರೂಪಾಯಿ ನೀಡುವುದಾಗಿ ಪ್ರಧಾನಮಂತ್ರಿಗಳೇ ತಿಳಿಸಿದ್ದಾರೆ. ಪ್ರತಿಯೊಬ್ಬ ಕಾರ್ಮಿಕನಿಗೆ ತಿಂಗಳಿಗೆ 8-9 ಸಾವಿರ ನೀಡಲು ಹಾಗೂ ಒಂದು ಪಂಚಾಯ್ತಿ 4-5 ಕೋಟಿ ಖರ್ಚು ಮಾಡಲು ಅವಕಾಶವಿದೆ. ನನ್ನ ಕ್ಷೇತ್ರ ಕನಕಪುರದಲ್ಲಿ ಈ ಅನುದಾನವನ್ನು ಹೆಚ್ಚು ಬಳಸಿಕೊಂಡಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಸ್ತಿ ನೀಡಿದೆ. ಜನರು ವೈಯಕ್ತಿಕವಾಗಿ ಉದ್ಯೋಗ ಮಾಡಲು ಪಂಚಾಯ್ತಿ ಮಟ್ಟದಲ್ಲಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಉದ್ಯೋಗ ಮಾಡಲು ಬರುವವರ ನೋಂದಣಿ ಮಾಡಿಕೊಂಡು, ಪರಿಶೀಲನೆ ನಡೆಸಿ ದುಡುಕೊಡುವುದಷ್ಟೇ ನಿಮ್ಮ ಕೆಲಸ. ಈ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಮುಂದಿನ ಎರಡು ಮೂರು ದಿನಗಳಲ್ಲಿ ಸರ್ಕಾರ ಈ ಕೆಲಸ ಮಾಡದಿದ್ದರೆ. ಕಾಂಗ್ರೆಸ್ ಪಕ್ಷದ ಪರವಾಗಿ ನಾನು ವಿಡಿಯೋ ಮಾಡಿ ಜನರಲ್ಲಿ ಜಾಗೃತಿ ಮೂಡಿಸುತ್ತೇನೆ. ಮುಂದಿನ ದಿನಗಳಲ್ಲಿ ಉದ್ಯೋಗ ಇಲ್ಲದೇ ಹಣ ಸಿಗದಿದ್ದರೆ ಜನ ಎಲ್ಲಿ ಕಳ್ಳತನದಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಇಳಿಯುತ್ತಾರೋ ಎಂಬ ಭಯ ಹುಟ್ಟುಕೊಂಡಿದೆ. ಕಾನೂನು ಸುವ್ಯವಸ್ಥೆ ಹಾಳಾಗದಂತೆ ಎಚ್ಚರಿಕೆ ವಹಿಸಿ ಜನರಲ್ಲಿ ಜಾಗೃತಿ ಮೂಡಿಡಿಸುವುದು ಇಲಾಖೆಯ ಕೆಲಸ,’ ಎಂದು ಹೇಳಿದರು.

ರೈತರ ಬೆಳೆ ಗ್ರಾಹರಿಗೆ ತಲುಪಿಸಿ

‘ನಮ್ಮಲ್ಲಿ ಹಾಲು ಒಕ್ಕೂಟ ಸೇರಿದಂತೆ ಅನೇಕ ಸಹಕಾರಿ ಸಂಸ್ಥೆಗಳು ಬಲಿಷ್ಠವಾಗಿದ್ದು, ಪ್ರತಿಯೊಂದು ಹಳ್ಳಿಗಳನ್ನು ತಲುಪುವ ಸಾಮರ್ಥ್ಯ ಹೊಂದಿವೆ. ಈ ಸಹಕಾರಿ ಸಂಘಗಳನ್ನು ಬಳಸಿಕೊಂಡು ರೈತರು ಬೆಳೆದ ಹಣ್ಣು, ತರಕಾರಿ, ಸೊಪ್ಪುಗಳನ್ನು ಸರ್ಕಾರ ಖರೀದಿಸಿ ಅವುಗಳನ್ನು ತಾಲೂಕು, ಜಿಲ್ಲಾ ಮಟ್ಟದ ನಗರಗಳಲ್ಲಿ ಗ್ರಾಹಕರಿಗೆ ಕೈಗೆಟುಕುವ ಬೆಲೆಗೆ ಮಾರಾಟ ಮಾಡಬೇಕು. ಇದು ಲಾಭ ಮಾಡುವ ಕೆಲಸವಲ್ಲ. ಈ ಕೆಲಸ ಮಾಡಲು ಸರ್ಕಾರಕ್ಕೆ ಹೆಚ್ಚಿನ ಆರ್ಥಿಕ ಹೊರೆಯೂ ಬೀಳುವುದಿಲ್ಲ. ಇನ್ನು ಶಿವಮೊಗ್ಗ ಹಾಗೂ ಮಲೆನಾಡು ಭಾಗಗಳಿಂದಲೂ ನನಗೆ ಹೆಚ್ಚಿನ ಕರೆ ಬರುತ್ತಿದ್ದು, ಅಡಿಕೆ ಬೆಳೆಗಾಗರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು,’ ಎಂದು ಸಲಹೆ ನೀಡಿದರು.

ವೈದ್ಯಕೀಯ ಸೇವೆ ಸಿಗಬೇಕು

‘ಇಂದು ವಿಶ್ವ ಆರೋಗ್ಯ ದಿನ. ಸದ್ಯ ವೈದ್ಯರು ನಮ್ಮ ಆರೋಗ್ಯ ಕಾಪಾಡಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಔಷಧ, ವೈದ್ಯಕೀಯ ಉಪಕರಣ ತಯಾರಕರಿಂದ ಹಿಡಿದು, ವೈದ್ಯರು, ನರ್ಸ್ ಗಳಿಗೆ ಅಭಿನಂದನೆ ಸಲ್ಲಿಸಿ ಶುಭಕೋರುತ್ತೇನೆ. ಸದ್ಯ ಕೆಲವು ಆಸ್ಪತ್ರೆ ಕ್ಲಿನಿಕ್ ಗಳನ್ನು ಮುಚ್ಚಲಾಗಿದೆ. ಹೀಗಾಗಿ ಅನೇಕ ವೈದ್ಯರು ರೋಗಿಗಳಿಗೆ ಚಿಕಿತ್ಸೆ ನೀಡುವ ಇಚ್ಛೆ ಇದ್ದರೂ ಮನೆಯಲ್ಲೇ ಸಿಲುಕಿದ್ದಾರೆ. ಇವರನ್ನು ಗುರುತಿಸಿ ಇವರಿಗೆ ವಿಶೇಷ ಕಾರ್ಡ್ ನೀಡಿ ಅವರು ಆರೋಗ್ಯ ಸೇವೆ ನೀಡಲು ಅವಕಾಶ ಮಾಡಿಕೊಡಬೇಕು. ಸರ್ಕಾರಿ ಆಸ್ಪತ್ರೆಗಳು ಕೇವಲ ಕೊರೋನಾ ಪ್ರಕರಣ ಮಾತ್ರ ನೋಡುವುದಾಗಿ ಹೇಳಿದ್ದು, ಬೇರೆ ರೋಗಿಗಳಿಗೆ ತೊಂದರೆಯಾಗುತ್ತಿದೆ. ಈ ಹೊತ್ತಲ್ಲಿ ಈ ವೈದ್ಯರ ಸೇವೆ ಬಳಸಿಕೊಳ್ಳಬೇಕು. ರಾಜ್ಯದಲ್ಲಿ ಯಾವುದೇ ವ್ಯಕ್ತಿಯೂ ಚಿಕಿತ್ಸೆ ಸಿಗದೇ ಸಾಯಬಾರದು ಎಂಬುದು ನಮ್ಮ ಕಾಳಜಿ,’ ಎಂದರು

ಸರ್ಕಾರಕ್ಕೆ ಸಲಹೆ ನೀಡುತ್ತೇವೆ

ಕೆಪಿಸಿಸಿ ವತಿಯಿಂದ ಮಾಜಿ ಸಚಿವ ರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಸಮಿತಿಯು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಘೋಷಣೆಗಳು ಜನರಿಗೆ ತಲುಪುತ್ತಿದೆಯೇ, ವೈದ್ಯರಿಗೆ ಪಿಪಿಇ ಕಿಟ್ ಕೊರತೆ, ಪ್ರಯೋಗಾಲಯಗಳ ಕೊರತೆ ಸೇರಿದಂತೆ ಜನರ ಸಮಸ್ಯೆಗಳೇನು? ಎಂಬುದನ್ನು ಸ್ಥಳೀಯರನ್ನು ಸಂಪರ್ಕಿಸಿ ಮಾಹಿತಿ ಕಲೆಹಾಕಿದ್ದಾರೆ. ಈ ಬಗ್ಗೆ ನಿನ್ನೆ ಚರ್ಚೆ ಮಾಡಿದ್ದು, ಸರ್ಕಾರಕ್ಕೆ ಸಲಹೆ ಪಟ್ಟಿಯನ್ನು ನೀಡುತ್ತೇವೆ ಎಂದು ತಿಳಿಸಿದರು.

ಸರ್ಕಾರಕ್ಕೆ ನೆರವಾಗಿ ಎಂದು ಕಾರ್ಯಕರ್ತರಿಗೆ ಕರೆ

ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ನಮ್ಮ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಜತೆಗೆ ಸಾಮಾಜಿಕ ತರ ಕಾಯ್ದುಕೊಳ್ಳುವಂತೆ ಸೂಚಿಸಿದ್ದೇವೆ. ಕೊರೋನಾ ಸಮಸ್ಯೆ ಮುಗಿದ ನಂತರ ನಾವು ದೊಡ್ಡ ಆರ್ಥಿಕ ಸಾವಲು ಎದುರಿಸಬೇಕಾಗುತ್ತದೆ. ಐಟಿ ಕ್ಷೇತ್ರದಲ್ಲಿ ಶೇ.30ರಷ್ಟು ಉದ್ಯೋಗ ಕಡಿತ ಮಾಡುವ ಬಗ್ಗೆ ಚರ್ಚೆಯಾಗುತ್ತಿದೆ. ನಾವು ನಮ್ಮ ಐಟಿ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು. ವಿಶ್ವದಾದ್ಯಂತ ಜನರು ರಾಜ್ಯವನ್ನು ಗಮನಿಸುತ್ತಿದ್ದಾರೆ. ಉದ್ಯೋಗಿಗಳ ಜತೆಗೆ ಉದ್ಯೋಗದಾತರ ಹಿತಾಸಕ್ತಿಯನ್ನು ಕಾಪಾಡಬೇಕಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಆರ್ಥಿಕ ಸಮಸ್ಯೆ ಎದುರಿಸಿ ರಾಜ್ಯ ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬುದರ ಕುರಿತೂ ಮಾರ್ಗಸೂಚಿ ಸಿದ್ದಪಡಿಸಲು ಮಾಜಿ ಸಚಿವ ಆರ್.ವಿ ದೇಶಪಾಂಡೆ ಅವರ ನೇತೃತ್ವದಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು ಸಂಚಾಲಕರಾಗಿ ಸಮತಿ ರಚಿಸಲಾಗಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಹೊಸ ಆರ್ಥಿಕ ನೀತಿಗಳನ್ನು ಜಾರಗೆ ತರಬೇಕಾದ ಅಗತ್ಯವಿದೆ. ಕೈಗಾರಿಕೆ, ಕೃಷಿ ಸೇರಿದಂತೆ ಎಲ್ಲ ಕ್ಷೇತ್ರದ ಕುರಿತು ಅಧ್ಯಯನ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ವಿರೋಧ ಪಕ್ಷ ಸ್ಥಾನದಲ್ಲಿ ಕೂತು ತನ್ನ ಕರ್ತವ್ಯ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜಕೀಯ ಮಾಡಲ್ಲ

ಈ ಸಂದರ್ಭದಲ್ಲಿ ಸರ್ಕಾರದ ಸಚಿವರ ನಡುವಿನ ಅಸಮಾಧಾನ, ಸಿಂಧನೂರಿನ ಮಹಿಳೆ ಸಾವು ಪ್ರಕರಣಗಳನ್ನು ನಾವು ದೊಡ್ಡ ವಿವಾದ ಮಾಡಲು ಹೋಗುವುದಿಲ್ಲ. ಸರ್ಕಾರ ಈ ವಿಚಾರಗಳಲ್ಲಿ ಸೂಕ್ಷ್ಮವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡುತ್ತೇವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT