ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣದ ಯೋಜನೆಗಳು ವಿದ್ಯಾರ್ಥಿ ಕೇಂದ್ರಿತವಾಗಿರಲಿ: ಡಾ. ಅಶ್ವತ್ಥನಾರಾಯಣ 

Last Updated 17 ಫೆಬ್ರುವರಿ 2020, 9:27 IST
ಅಕ್ಷರ ಗಾತ್ರ

ಬೆಂಗಳೂರು:ಉನ್ನತ ಶಿಕ್ಷಣ ಸಂಬಂಧ ಎಲ್ಲ ಯೋಜನೆಗಳು ವಿದ್ಯಾರ್ಥಿ ಕೇಂದ್ರಿತವಾಗಿರಬೇಕು ಹೊರತು, ಆಡಳಿತಾತ್ಮಕ ದೃಷ್ಟಿಯಿಂದ ಇರಬಾರದು ಎಂದು ಉನ್ನತ ಶಿಕ್ಷಣ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಬ್ರಿಟಿಷ್‌ ಕೌನ್ಸಿಲ್‌ ಸಹಯೋಗದಲ್ಲಿ ಉನ್ನತ ಶಿಕ್ಷಣ ಮಂಡಳಿ ಆಯೋಜಿಸಿದ್ದ 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 'ಪರಿಣಾಮಕಾರಿ ಆಡಳಿತ ಹಾಗೂ ನಾಯಕತ್ವ' ಕುರಿತ ಸಮಾವೇಶದಲ್ಲಿ ಪಾಲ್ಗೊಂಡು ಅವರುಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸಿದಾಗ ಮಾತ್ರ ಧ್ಯೇಯೋದ್ದೇಶಗಳು ಈಡೇರಲು ಸಾಧ್ಯ. ಇಲ್ಲದಿದ್ದರೆ ಅದು ಕೇವಲ ಯೋಜನೆಯಾಗಿಯೇ ಉಳಿಯುತ್ತದೆ. ಹಾಗಾಗಿಯೇ, ಪ್ರತಿ ಯೋಜನೆಯೂ ವಿದ್ಯಾರ್ಥಿ ಕೇಂದ್ರಿತವಾಗಿರಬೇಕು. ಪರಿಣಾಮಕಾರಿ ಆಡಳಿತ ನೀಡುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಇಲಾಖೆ ಹಲವು ಸಂಸ್ಥೆಗಳ ಜತೆ ಕೆಲಸ ಮಾಡುತ್ತಿದ್ದು, ಹಲವು ಹೊಸ ಯೋಜನೆಗಳನ್ನು ಕೈಗೆತ್ತಿಕೊಂಡಿದೆ ಎಂದರು.

ಶೈಕ್ಷಣಿಕ ಕ್ಷೇತ್ರದಲ್ಲಿ ನಾಯಕರಾಗಲು ಬಯಸುವವರು ಉತ್ತಮ ನಾಯಕತ್ವದ ಗುಣ ಹೊಂದಿರಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಉತ್ತಮ ಸಂವಹನ ಕಲೆ ಇರಬೇಕು. ನಮ್ಮ ಆಲೋಚನೆಯನ್ನು ಸ್ಪಷ್ಟವಾಗಿ ಹಂಚಿಕೊಂಡಾಗ ಮಾತ್ರ ಯೋಜನೆಗಳ ಸರಿಯಾದ ಅನುಷ್ಠಾನ ಸಾಧ್ಯ ಎಂದರು

ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ವಿಶ್ವವಿದ್ಯಾಲಯಗಳು ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಲ್ಲವು. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯಗಳು ವಿಶ್ವಾಸಾರ್ಹತೆ ಕಾಯ್ದುಕೊಳ್ಳಬೇಕು. ಈ ಸಂಬಂಧ ಇಂದು ನಡೆಯುತ್ತಿರುವ ಚರ್ಚೆಯ ಅಂಶಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧ ಎಂದು ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜಕುಮಾರ್‌ ಖತ್ರಿ, ಇಂಟರ್‌ನ್ಯಾಷನಲ್‌ ಟ್ರೇಡ್‌ ಸೌತ್‌ ಏಷ್ಯಾ ನೆಟವರ್ಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಚರ್ಡ್‌ ಹೊಮರ್‌, ಉನ್ನತ ಶಿಕ್ಷಣ ಮಂಡಳಿ ಉಪಾಧ್ಯಕ್ಷ ಎಸ್.ವಿ. ರಂಗನಾಥ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT