ಬೆಂಗಳೂರು: ಬರಪೀಡಿತ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಡ್ಡಾಯವಾಗಿ ಪ್ರತಿ ದಿನವೂ ಭೇಟಿ ನೀಡಬೇಕು.ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸರಬರಾಜು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದೇಶಿಸಿದ್ದಾರೆ.
ಬರ ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.
ಸಮಸ್ಯಾತ್ಮಕ ಗ್ರಾಮಗಳಲ್ಲಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಅಗತ್ಯ ತೀರ್ಮಾನ ಕೈಗೊಳ್ಳಬೇಕು. ಬರ ನಿರ್ವಹಣೆಯಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚಿಸಿದರು.
₹713.76 ಕೋಟಿ ಲಭ್ಯ: ಬರ ಪರಿಹಾರ ಕಾರ್ಯ ಕೈಗೊಳ್ಳಲು ಹಣ ಬಿಡುಗಡೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳ ಬಳಿ ₹713.76 ಕೋಟಿ ಹಣ ಲಭ್ಯವಿದೆ.
ರಾಜ್ಯದಲ್ಲಿ 1.29 ಕೋಟಿ ಜಾನುವಾರುಗಳಿದ್ದು, ಪ್ರಸ್ತುತ 62.48 ಲಕ್ಷ ಟನ್ ಮೇವು ಲಭ್ಯವಿದೆ. ಇದು 12 ವಾರಗಳಿಗೆ ಸಾಕಾಗುತ್ತದೆ. 165 ಮೇವು ಬ್ಯಾಂಕ್ ತೆರೆಯಲಾಗಿದ್ದು, ₹2ಕ್ಕೆ ಪ್ರತಿ ಕೆ.ಜಿ ಮೇವು ವಿತರಣೆ ಮಾಡಲಾಗುತ್ತಿದೆ. 16 ಗೋಶಾಲೆಗಳನ್ನು ತೆರೆದಿದ್ದು, 14 ಸಾವಿರ ಜಾನುವಾರು ಸಂರಕ್ಷಿಸಲಾಗಿದೆ.
ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸಭೆಯಲ್ಲಿ ಇದ್ದರು.