ಬೆಂಗಳೂರು: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಯಾವುದೇ ಸಮಸ್ಯೆ ಇಲ್ಲ. ಪ್ರಬಲ ಸ್ಪರ್ಧಿ ಜತೆಗೆ ಸೆಣಸಾಟಕ್ಕೆ ಸಿದ್ಧ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ಸಂಸದರಾಗಿ ತಮ್ಮ ಐದು ವರ್ಷಗಳ ಸಾಧನೆ ಕುರಿತು ಪುಸ್ತಕ ಬಿಡುಗಡೆ ಮಾಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇದುವರೆಗೆ ನನಗಿಂತ ಚಿಕ್ಕವರ ಜತೆಗೆ ಸ್ಪರ್ಧೆ ಮಾಡಿ ಗೆದ್ದಿದ್ದೇನೆ. ದೇವೇಗೌಡರ ಸವಾಲನ್ನು ಗೌರವಯುತವಾಗಿ ಸ್ವೀಕರಿಸಿ ಗೆಲ್ಲುವ ವಿಶ್ವಾಸ ಇದೆ’ ಎಂದರು.
‘ದೇವೇಗೌಡರ ಸ್ಪರ್ಧೆಗೆ ಹೆದರಿ ನಾನು ಪಲಾಯನ ಮಾಡುತ್ತಿಲ್ಲ. ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರು ದೇಶದ್ರೋಹಿಗಳು. ಯಾರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಬೇಕು ಎಂದು ನಿರ್ಧರಿಸುವವರು ವರಿಷ್ಠರು. ನಾನು ಯಾರಿಗೂ ಭಯಪಟ್ಟು ವಲಸೆ ಹೋಗು ತ್ತಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.
‘ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ಮುಖ್ಯ. ನನ್ನ ಹಿತಾಸಕ್ತಿ ಮುಖ್ಯವಲ್ಲ. ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.