ಬೆಂಗಳೂರು: ‘ಕೊರೊನಾ ಸೋಂಕಿನ ಭೀತಿಯಿಂದಾಗಿ ಉದ್ಯಮಗಳನ್ನು ಬಂದ್ ಮಾಡಲಾಗುತ್ತಿದೆ. ಉದ್ಯೋಗ ನಷ್ಟವಾಗುತ್ತಿದೆ. ಹೀಗಾಗಿ, ಸಾಲ ಮರುಪಾವತಿಯ ಕಂತು ಕಟ್ಟಲು ಒತ್ತಡ ಹೇರಬಾರದು. ಎರಡು–ಮೂರು ತಿಂಗಳು ವಿನಾಯಿತಿ ನೀಡಬೇಕು’ ಎಂದು ಕಾಂಗ್ರೆಸ್ ಸದಸ್ಯ ಆರ್.ವಿ.ದೇಶಪಾಂಡೆ ಒತ್ತಾಯಿಸಿದರು.
ವಿಧಾನಸಭೆಯಲ್ಲಿ ಸೋಮವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಲಾಕ್ ಡೌನ್ ಮಾಡಲು ತೀರ್ಮಾನಿಸಿರುವುದು ಉತ್ತಮ ನಿರ್ಧಾರ. ಜತೆಗೆ, ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಗಮನ ಹರಿಸಬೇಕು’ ಎಂದರು.
‘15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ಹಂಚಿಕೆಯಾಗಿದ್ದ ₹5,495 ಕೋಟಿ ವಿಶೇಷ ಅನುದಾನಕ್ಕೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಡೆ ಒಡ್ಡಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಕಾರಣ’ ಎಂದು ವಾಗ್ದಾಳಿ ನಡೆಸಿದರು.
‘15ನೇ ಹಣಕಾಸು ಆಯೋಗವು ರಾಜ್ಯದ ಪಾಲನ್ನು ₹8,887 ಕೋಟಿಯಷ್ಟು ಕಡಿಮೆ ಮಾಡಿದೆ. ಜಿಎಸ್ಟಿ ಪರಿಹಾರ ಮೊತ್ತವೂ ಈ ವರ್ಷ ₹3 ಸಾವಿರ ಕೋಟಿ ಕಡಿಮೆಯಾಗಿದೆ. ತೆರಿಗೆ ಸಂಗ್ರಹ ಪ್ರಮಾಣವೂ ಇಳಿಮುಖವಾಗುತ್ತಿದೆ. ಇನ್ನೊಂದೆಡೆ, ರಾಜ್ಯದ ಸಾಲದ ಪ್ರಮಾಣವೂ ಹೆಚ್ಚಾಗುತ್ತಿದೆ’ ಎಂದರು.