ಬೆಂಗಳೂರು: ಕೈಗಾರಿಕೆಗಳ ಉತ್ತೇಜನ ಉದ್ದೇಶದಿಂದಲೇ ಕಲಬುರ್ಗಿ ಮತ್ತು ಶಿವಮೊಗ್ಗಗಳಲ್ಲಿ ವಿಮಾನನಿಲ್ದಾಣಗಳು ನಿರ್ಮಾಣವಾಗುತ್ತಿದ್ದು, ಕಲಬುರ್ಗಿ ವಿಮಾನನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು20 ದಿನದಲ್ಲಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ವತಿಯಿಂದ ಆಯೋಜಿಸಲಾದ ಸರ್.ಎಂ. ವಿಶ್ವೇಶ್ವರಯ್ಯ ಶ್ರೇಷ್ಠ ಉತ್ಪಾದನಾ ಪ್ರಶಸ್ತಿ ಹಾಗೂ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಹೊಸ ಕೈಗಾರಿಕಾ ನೀತಿಯನ್ನು ರೂಪಿಸಲಾಗುತ್ತಿದ್ದು, ಉದ್ಯಮಿಗಳು, ಕೈಗಾರಿಕಾ ಕ್ಷೇತ್ರದ ಪರಿಣಿತರು ಇದಕ್ಕೆ ಸಲಹೆ ನೀಡಬೇಕು. ನೂತನ ಜವಳಿ ನೀತಿ, ತೆಂಗಿನ ನಾರಿನ ಅಭಿವೃದ್ಧಿ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಅವರು ಹೇಳಿದರು.
ಕೈಗಾರಿಕೆಗಳು ಎದುರಿಸುತ್ತಿರುವ ಆಡಳಿತಾತ್ಮಕ ತೊಂದರೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಆಯಾ ಭೌಗೋಳಿಕ ಪರಿಸ್ಥಿತಿಗೆ ತಕ್ಕಂತೆ ಕೈಗಾರಿಕಾ ಕ್ಲಸ್ಟರ್ಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.
ಮನೆ ನಿರ್ಮಿಸಲು ನೆರವಾಗಿ: ಅತಿವೃಷ್ಟಿಯಿಂದ ಒಂದೂವರೆ ಲಕ್ಷ ಮನೆಗಳು ನೆಲಸಮವಾಗಿದ್ದು, 300ಕ್ಕೂ ಅಧಿಕ ಹಳ್ಳಿಗಳನ್ನು ಎತ್ತರದ ಸ್ಥಳಗಳಿಗೆ ಸ್ಥಳಾಂತರಿಸಬೇಕಾಗಿದೆ. ಮನೆ ನಿರ್ಮಾಣದ ಈ ಮಹಾನ್ ಕಾರ್ಯದಲ್ಲಿ ಕೈಗಾರಿಕೆಗಳು ತಮ್ಮಿಂದಾದ ಗರಿಷ್ಠ ಕೊಡುಗೆ ನೀಡಬೇಕು ಎಂದು ಮುಖ್ಯಮಂತ್ರಿ ಮನವಿ ಮಾಡಿದರು.