ಬೆಂಗಳೂರು: ಕೃಷಿ ಸಾಲ ವಸೂಲಿ ಮಾಡದಂತೆ ವಿಧಿಸಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ತೆಗೆದುಹಾಕಿದ್ದು, ಸುಸ್ತಿ ಸಾಲ ವಸೂಲಾತಿಗೆ ಅಗತ್ಯ ಕ್ರಮವನ್ನು ಕೈಗೊಳ್ಳುವಂತೆ ಸಹಕಾರ ಬ್ಯಾಂಕ್ ಹಾಗೂ ಸಂಘಗಳಿಗೆ ಸೂಚಿಸಲಾಗಿದೆ.
2016–17ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 110 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶ ಗಳೆಂದು ಸರ್ಕಾರ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಬಲವಂತವಾಗಿ ಸಾಲ ವಸೂಲಿ ಮಾಡಬಾರದು. ನೋಟಿಸ್ ನೀಡುವುದು, ಪ್ರಕರಣ ದಾಖಲಿಸುವ ಮೂಲಕ ವಸೂಲಿಗೆ ಪ್ರಯತ್ನಿಸಬಾರದು ಎಂದು ಸಹಕಾರ ಸಂಸ್ಥೆಗಳಿಗೆ ಸೂಚನೆ ನೀಡಲಾಗಿತ್ತು.
ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಈಚೆಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೀರ್ಘಾವಧಿ ಸಾಲಗಳ ವಸೂಲಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಹಕಾರ ಇಲಾಖೆಯ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.