ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಹಾಲಿ ಶಾಸಕರಿಗೆ ಮತ್ತೆ ಮಣೆ

Last Updated 16 ಏಪ್ರಿಲ್ 2018, 8:25 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಹಾಲಿ ಶಾಸಕರಿಗೆ ಟಿಕೆಟ್‌ ಖಾತ್ರಿಯಾಗಿದೆ. ಭಾನುವಾರ ರಾತ್ರಿ ಬಿಡುಗಡೆಗೊಂಡ ಅಭ್ಯರ್ಥಿಗಳ ಪಟ್ಟಿಯಲ್ಲಿ ಗದಗ ಕ್ಷೇತ್ರಕ್ಕೆ ಎಚ್‌.ಕೆ ಪಾಟೀಲ, ರೋಣ ಕ್ಷೇತ್ರಕ್ಕೆ ಜಿ.ಎಸ್‌.ಪಾಟೀಲ, ನರಗುಂದ ಕ್ಷೇತ್ರಕ್ಕೆ ಬಿ.ಆರ್‌ ಯಾವಗಲ್‌ ಮತ್ತು ಶಿರಹಟ್ಟಿ ಮೀಸಲು ಕ್ಷೇತ್ರಕ್ಕೆ ರಾಮಕೃಷ್ಣ ದೊಡ್ಡಮನಿ ಅವರಿಗೆ ಟಿಕೆಟ್‌ ಲಭಿಸಿದೆ.

ಶಿರಹಟ್ಟಿ ಮೀಸಲು ಕ್ಷೇತ್ರದಲ್ಲಿ ಸುಜಾತ ದೊಡ್ಡಮನಿ ಮತ್ತು ನರಗುಂದ ಕ್ಷೇತ್ರದಿಂದ ದಶರಥ ಗಾಣಿಗೇರ ಅವರು ಕಾಂಗ್ರೆಸ್‌ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದರು. 2013ರಲ್ಲೂ ಇವರಿಬ್ಬರು ಈ ಕ್ಷೇತ್ರದಿಂದ ಟಿಕೆಟ್‌ಗಾಗಿ ಪ್ರಯತ್ನಿಸಿದ್ದರು. ಇಬ್ಬರಿಗೂ ಟಿಕೆಟ್‌ ಕೈತಪ್ಪಿತ್ತು. ಈ ಬಾರಿಯೂ ಪಕ್ಷವು ಹಾಲಿ ಶಾಸಕರಿಗೆ ಮಣೆ ಹಾಕಿದೆ.

2008ರಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಮೊದಲ ಬಾರಿ ಕಮಲ ಅರಳಿತ್ತು. 2013ರಲ್ಲಿ ಚುನಾವಣೆ ನಡೆಯುವಾಗ ಬಿಜೆಪಿ ಅಧಿಕಾರದಲ್ಲಿದ್ದರೂ ಪಕ್ಷ ಹೀನಾಯವಾಗಿ ಸೋತಿತ್ತು. ಬಿ.ಎಸ್‌. ಯಡಿಯೂರಪ್ಪ ಕಟ್ಟಿದ್ದ ಕೆಜೆಪಿ ಹಾಗೂ ಶ್ರೀರಾಮುಲು ಸ್ಥಾಪಿಸಿದ್ದ ಬಿಎಸ್ಆರ್ ಕಾಂಗ್ರೆಸ್‌ ಜಿಲ್ಲೆಯಲ್ಲಿ ಕಮಲ ಮುದುಡುವಲ್ಲಿ ಪ್ರಮುಖ ಕಾರಣವಾಗಿತ್ತು.

ಕಾಂಗ್ರೆಸ್‌ ಮರಳಿ ಈ ನಾಲ್ಕೂ ಕ್ಷೇತ್ರಗಳನ್ನು ವಶಕ್ಕೆ ಪಡೆದುಕೊಂಡಿತ್ತು. 1957ರಲ್ಲಿ ನಡೆದ ಮೊದಲ ಚುನಾವಣೆಯಿಂದ ಹಿಡಿದು ಇಲ್ಲಿಯವರೆಗಿನ 14 ಚುನಾವಣೆಯಲ್ಲಿ 11 ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಗದಗ ಕ್ಷೇತ್ರದಲ್ಲಿ ಆಯ್ಕೆಯಾಗಿದ್ದಾರೆ. ಕೆ.ಎಚ್.ಪಾಟೀಲ ಕುಟುಂಬದವರೇ 9 ಬಾರಿ ಆಯ್ಕೆಯಾಗಿರುವುದು ಈ ಕ್ಷೇತ್ರದ ಮತ್ತೊಂದು ವಿಶೇಷ.

ಬಿಎಸ್ಆರ್ ಕಾಂಗ್ರೆಸ್‌ನ ಅಭ್ಯರ್ಥಿ ಜಯಶ್ರೀ ಹಳೆಪ್ಪನವರ ತೀವ್ರ ಪೈಪೋಟಿ ನೀಡಿದ್ದರಿಂದ ಗದಗ ಜಿಲ್ಲೆ ಶಿರಹಟ್ಟಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ದೊಡ್ಡಮನಿ ರಾಮಕೃಷ್ಣ ಕೇವಲ 315 ಮತಗಳಿಂದ ಗೆದ್ದಿದ್ದರು. ಈ ಕ್ಷೇತ್ರ ಕೂಡ ಈ ಬಾರಿ ಕುತೂಹಲ ಮೂಡಿಸಿದೆ.

**

ಟಿಕೆಟ್‌ಗಾಗಿ ಪ್ರಯತ್ನಿಸಿದ್ದೆ. ದೆಹಲಿಗೆ ಹೋಗಿ ವರಿಷ್ಠರಿಗೆ ಮನವಿ ಸಲ್ಲಿಸಿದ್ದೆ. ಆದರೆ, ಪಕ್ಷವು ಹಾಲಿ ಶಾಸಕರಿಗೆ ಟಿಕೆಟ್‌ ಕೊಟ್ಟಿದೆ – ದಶರಥ ಗಾಣಿಗೇರ, ಟಿಕೆಟ್‌ ಆಕಾಂಕ್ಷಿ.

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT