ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ವೇತನ ಹೆಚ್ಚಳಕ್ಕೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಭರವಸೆ

‘ಪೊಲೀಸ್ ಸಂಸ್ಮರಣಾ’ ಕಾರ್ಯಕ್ರಮ
Last Updated 21 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ಬೆಂಗಳೂರು: ‘ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಎಡಿಜಿಪಿ ರಾಘವೇಂದ್ರ ಔರಾದಕರ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೆ ತರಲಾಗುವುದು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ‘ಪೊಲೀಸ್ ಸಂಸ್ಮರಣಾ’ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ಪೊಲೀಸರ ವೇತನ ತುಂಬಾ ಕಡಿಮೆ ಇದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುವ ಪೊಲೀಸರಿಗೆ ಆರ್ಥಿಕ ನ್ಯಾಯ ಒದಗಿಸಲು ನಾವು ಬದ್ಧರಿದ್ದೇವೆ’ ಎಂದು ಹೇಳಿದರು.

‘ಔರಾದಕರ ಸಮಿತಿ ಏಳು ರಾಜ್ಯಗಳ ಪೊಲೀಸರ ವೇತನ, ಭತ್ಯೆ ಹಾಗೂ ಕಾರ್ಯವೈಖರಿಯ ಬಗ್ಗೆ ಅಧ್ಯಯನ ನಡೆಸಿ ವರದಿ ಕೊಟ್ಟಿದೆ. ಅದರ ಅನುಷ್ಠಾನದ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯುತ್ತಿದ್ದು, ಸದ್ಯದಲ್ಲೇ ಅಂತಿಮ ನಿರ್ಧಾರಕ್ಕೆ ಬರಲಿದ್ದೇವೆ’ ಎಂದು ತಿಳಿಸಿದರು.

‘ಕೆಟ್ಟ ಶಕ್ತಿಗಳ ಮಟ್ಟ ಹಾಕಿ’

‘ಸಮಾಜದ ನೆಮ್ಮದಿ ಹಾಳು ಮಾಡಲೆಂದೇ ಹಲವು ವರ್ಗಗಳು ಹುಟ್ಟಿಕೊಂಡಿವೆ. ಅವು ಜಾತಿ–ಧರ್ಮಗಳ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸುತ್ತಿವೆ. ರಾಜಿ, ಅಂಜಿಕೆ ಇಲ್ಲದೇ ಅಂಥ ಕೆಟ್ಟ ಶಕ್ತಿಗಳನ್ನು ಮಟ್ಟಹಾಕಿ’ ಎಂದು ಕುಮಾರಸ್ವಾಮಿ ಕರೆ ನೀಡಿದರು.

‘ಯುವಕರ ಭವಿಷ್ಯ ಹಾಳು ಮಾಡುತ್ತಿರುವ ಡ್ರಗ್ಸ್ ಜಾಲಗಳ ಬೇರುಗಳನ್ನು ಬುಡಸಮೇತ ಕಿತ್ತುಹಾಕಿ’ ಎಂದು ಅವರು ಕಿವಿಮಾತು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT