ಬೆಂಗಳೂರು: ನಮ್ಮ ಪರಂಪರೆ, ಸಂಸ್ಕೃತಿ, ಸಂಪ್ರದಾಯಗಳನ್ನು ಸಂರಕ್ಷಿಸುವುದರೊಂದಿಗೆ, ಪ್ರಯೋಜನಕ್ಕೆ ಬಾರದ ಕಲ್ಪನೆ, ಮೂಢನಂಬಿಕೆಗಳನ್ನು ತ್ಯಜಿಸುವಂತೆ ರಾಜ್ಯಪಾಲ ವಜುಭಾಯಿ ವಾಲಾ ಹೇಳಿದರು.
71ನೇ ಗಣರಾಜ್ಯೋತ್ಸವದ ಅಂಗವಾಗಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ‘ದೇಶದಾದ್ಯಂತ ಮೂಲಭೂತ ಕರ್ತವ್ಯಗಳ ಬಗ್ಗೆ ಆಂದೋಲನ ನಡೆಯುತ್ತಿರುವ ಈ ಸಂದರ್ಭದಲ್ಲಿ,ನಾಗರಿಕರಾಗಿ ನಮ್ಮ ಕರ್ತವ್ಯಗಳ ಕುರಿತು ಗಮನಹರಿಸುವುದಕ್ಕೆ ಇದು ಸೂಕ್ತ ಕಾಲವಾಗಿದೆ' ಎಂದರು.
ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಪ್ರವಾಹ ಸಂದರ್ಭದಲ್ಲಿ ಕೈಗೊಂಡ ಕ್ರಮಗಳ ಕುರಿತೂ ಪ್ರಸ್ತಾಪಿಸಿದರು. ‘ಪ್ರವಾಹದಿಂದ ಸಂಕಷ್ಟಕ್ಕೊಳಗಾದ 2.7 ಲಕ್ಷ ಕುಟುಂಬಗಳಿಗೆ ತಲಾ ₹10 ಸಾವಿರ ಪರಿಹಾರವನ್ನು ಸಂತ್ರಸ್ತರ ಬ್ಯಾಂಕ್ ಖಾತೆಗೆ ಹಾಕಲಾಗಿದೆ. ತೀವ್ರ ಹಾನಿಗೊಳಗಾದ ಮನೆಗಳ ದುರಸ್ತಿಗೆ ₹5 ಲಕ್ಷ, ಭಾಗಶಃ ಹಾನಿಯಾದ ಮನೆಗಳ ದುರಸ್ತಿಗೆ ₹50 ಸಾವಿರ ನೆರವು ನೀಡಲಾಗಿದೆ’ ಎಂದು ತಿಳಿಸಿದರು.
ಸಾಲಮನ್ನಾ:‘2019–20ನೇ ಸಾಲಿನಲ್ಲಿ ಬೆಳೆ ಸಾಲ ಮನ್ನಾ ಯೋಜನೆ ಜಾರಿಗೊಳಿಸಲಾಗಿದ್ದು, ಇದರಿಂದ 21 ಲಕ್ಷ ರೈತರು ಪ್ರಯೋಜನ ಪಡೆಯಲಿದ್ದಾರೆ. ಸಹಕಾರಿ ಬ್ಯಾಂಕುಗಳಲ್ಲಿ ₹1 ಲಕ್ಷ,ವಾಣಿಜ್ಯ ಬ್ಯಾಂಕುಗಳಲ್ಲಿ ₹2 ಲಕ್ಷ ವರೆಗಿನ ಸಾಲ ಬಾಕಿಯನ್ನು ಮನ್ನಾ ಮಾಡಲಾಗುತ್ತದೆ’ ಎಂದರು.
ಬರ ತಡೆಯಲು ಯೋಜನೆ:ನರೇಗಾ ಮತ್ತು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಸಮನ್ವಯಗೊಳಿಸಿ ಆಯ್ದ 100 ಬರಪೀಡಿತ ಹಾಗೂ ಕಡಿಮೆ ಅಂತರ್ಜಲ ಮಟ್ಟ ಹೊಂದಿರುವ ತಾಲ್ಲೂಕುಗಳಲ್ಲಿ ಬರ ತಡೆಯಲು ‘ಜಲಾನಯನ ಅಭಿವೃದ್ಧಿ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.