ಬೆಳಗಾವಿ: ‘ಸದ್ಯದ ಪರಿಸ್ಥಿತಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಇದನ್ನು ಹೋಗಾಡಿಸಲು ಉದ್ದಿಮೆಗಳ ಬೆಳವಣಿಗೆಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುವುದು’ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶ್ರೀಮಂತ ಪಾಟೀಲ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಉದ್ದಿಮೆಗಳ ಬೆಳವಣಿಗೆ ದೃಷ್ಟಿಯಿಂದ, ಗುಣಮಟ್ಟದ ವಿದ್ಯುತ್ ಸೌಲಭ್ಯವನ್ನು ರಿಯಾಯಿತಿಯಲ್ಲಿ ಕಲ್ಪಿಸುವ ಅಗತ್ಯವಿದೆ. ಇದಕ್ಕೆ ಪ್ರಸ್ತಾವ ಸಿದ್ಧಪಡಿಸಬೇಕು’ ಎಂದು ಸೂಚಿಸಿದರು.
‘ಬೋರಗಾಂವದಲ್ಲಿ ಸಾಕಷ್ಟು ಜವಳಿ ಘಟಕಗಳು ಸ್ಥಾಪನೆಯಾಗಿದ್ದು, ನೀರು, ರಸ್ತೆ ಹಾಗೂ ವಿದ್ಯುತ್ ಸಮಸ್ಯೆ ಕಂಡುಬಂದಿದೆ. ಇದರ ನಿವಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ಕೈಮಗ್ಗ ಮತ್ತು ಜವಳಿ ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ನಿರಾಳೆ, ‘ಜಿಲ್ಲೆಯಲ್ಲಿ 7 ಜಿನ್ನಿಂಗ್, 3 ಸ್ಪಿನ್ನಿಂಗ್ ಘಟಕಗಳು, 1,256 ಕೈಮಗ್ಗ ಹಾಗೂ 31,371 ವಿದ್ಯುತ್ ಮಗ್ಗಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ, ‘ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಒದಗಿಸುತ್ತಿರುವ ಜವಳಿ ಉದ್ದಿಮೆಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಸಮಗ್ರ ವರದಿ ಸಲ್ಲಿಸಬೇಕು’ ಎಂದರು.
‘ಜವಳಿ ನೀತಿ ಯೋಜನೆಯಡಿ ಸಿದ್ಧ ಉಡುಪು ತಯಾರಿಕೆಗೆ ಸಂಬಂಧಿಸಿದಂತೆ ಉದ್ಯೋಗ ಸೃಜನೆಗಾಗಿ ಯುವಕ, ಯುವತಿಯರಿಗೆ 45 ದಿನಗಳ ತರಬೇತಿ ನೀಡಲಾಗುತ್ತಿದೆ. ಹಾಜರಾತಿ ಪಡೆಯಲು ಬಯೊಮೆಟ್ರಿಕ್ ವ್ಯವಸ್ಥೆ ಅಳವಡಿಸಬೇಕು’ ಎಂದು ನಿರ್ದೇಶನ ನೀಡಿದರು.
‘ಜವಳಿ ಉದ್ದಿಮೆ ಸ್ಥಾಪನೆಗೆ ಮುಂದಾಗುವವರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ತಿಳಿಸಿದರು.
‘ಅಲ್ಪಸಂಖ್ಯಾತರ ಇಲಾಖೆ ವಸತಿನಿಲಯಗಳಿಗೆ ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲಿಸುತ್ತೇನೆ’ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಗೋಪಾಲ, ಜಿಲ್ಲೆಯಲ್ಲಿ ಮೂರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಏಳು ಹಾಸ್ಟೆಲ್ಗಳ ಅಗತ್ಯವಿದೆ. ಮಂಜೂರಾತಿ ಕೊಡಿಸಬೇಕು’ ಎಂದು ಕೋರಿದರು.
ಕೈಮಗ್ಗ ಮತ್ತು ಜವಳಿ ಇಲಾಖೆಯ ಕೀರ್ತಪ್ಪ ಗೋಟೂರ, ಲೋಕೋಪಯೋಗಿ ಇಲಾಖೆ ಎಇ ಸಂಜೀವಕುಮಾರ ಹುಲಕಾಯಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.