ಬೆಂಗಳೂರು: ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ವತಿಯಿಂದ ಈ ಸಾಲಿನ ‘ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ’ಯನ್ನುಚಕ್ರೇಶ್ವರಿ ಮಹಿಳಾ ಸಮಾಜದ ಅಧ್ಯಕ್ಷೆ ನಿರ್ಮಲಮ್ಮ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ತಮಿಳುನಾಡಿನ ಅರಹಂತಗಿರಿ ಜೈನ ಮಠದ ಧವಳಕೀರ್ತಿ ಭಟ್ಟಾಕರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ನಿರ್ಮಲಮ್ಮ ಅವರ ಧಾರ್ಮಿಕ ಹಾಗೂ ಸಮಾಜ ಸೇವೆಯನ್ನು ಪರಿಗಣಿಸಿ ನೀಡಲಾದ ಪ್ರಶಸ್ತಿ ₹25 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
ಪ್ರಶಸ್ತಿ ಸ್ವೀಕರಿಸಿ ಬಳಿಕ ಮಾತನಾಡಿದ ನಿರ್ಮಲಮ್ಮ,‘ಜೈನ ಸಮಾಜದ ಹೆಣ್ಣು ಮಕ್ಕಳಿಗಾಗಿ ಒಂದು ಸಂಸ್ಥೆ ಕಟ್ಟಬೇಕೆಂಬ ಆಶಯದಿಂದ ಚಕ್ರೇಶ್ವರಿ ಮಹಿಳಾ ಸಮಾಜವನ್ನು ಸ್ಥಾಪಿಸಿದೆ. ಸಮಾಜದ ಅಭಿವೃದ್ಧಿಯಲ್ಲಿಜೈನ ಮೈತ್ರಿ ಕೂಟದ ಡಿ.ಸುರೇಂದ್ರ ಕುಮಾರ್ ಅವರೂ ಶ್ರಮಿಸಿದ್ದಾರೆ. ಅವರಿಗೆ ನಾನು ಚಿರಋಣಿ’ ಎಂದರು. ಕೂಟದ ಕಾರ್ಯಕಾರಿ ಸಮಿತಿ ಅಧ್ಯಕ್ಷೆ ಅನಿತಾ ಸುರೇಂದ್ರಕುಮಾರ್,‘ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ ಸಂಸ್ಥೆಯನ್ನು ಹುಟ್ಟುಹಾಕಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಮಾಜದವರನ್ನು ಗುರುತಿಸಿ, ರತ್ನಾಕರವರ್ಣಿ ಹೆಸರಿನಲ್ಲಿಪ್ರತಿವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ’ ಎಂದರು. ಕೂಟದ ಕಾರ್ಯಾಧ್ಯಕ್ಷ ಕೆ.ಬಿ.ಯುವರಾಜ್ ಬಲ್ಲಾಳ್, ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.