ಮೈಸೂರು: ‘ವಿರೋಧ ಪಕ್ಷಗಳು ಬಿಜೆಪಿಗೆ ಬೆಂಬಲ ನೀಡಿದರೆ ಅಭಿವೃದ್ಧಿ ಕೆಲಸಗಳು ನಡೆಯುತ್ತವೆ, ಜನರಿಗೂ ಒಳ್ಳೆಯದಾಗುತ್ತದೆ’ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮಂಗಳವಾರ ಇಲ್ಲಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಬಿಜೆಪಿ ಸರ್ಕಾರ ಬೀಳಲು ಬಿಡಲ್ಲ ಎಂಬುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಅವರಿಗೆ ಯಡಿಯೂರಪ್ಪ ಕೂಡ ಅಭಿನಂದನೆ ಹೇಳಿದ್ದಾರೆ. ಕುಮಾರಸ್ವಾಮಿ ಮಾತಿನ ಒಳ ಅರ್ಥ ಬೇರೆಯವರಿಗೆ ಅಷ್ಟು ಸುಲಭವಾಗಿ ಗೊತ್ತಾಗುವುದಿಲ್ಲ’ ಎಂದರು.
‘ಯಡಿಯೂರಪ್ಪ ಮುಖ್ಯಮಂತ್ರಿ ಆಗಬೇಕೆಂದು ಬಹಳ ಹಿಂದೆಯೇ ನಾನು ಹೇಳಿದ್ದೆ. ಒಮ್ಮೆ ಬಿಜೆಪಿ ಸರ್ಕಾರದಲ್ಲಿ ಗೃಹ ಮಂಡಳಿ ಅಧ್ಯಕ್ಷನೂ ಆಗಿ ಕೆಲಸ ಮಾಡಿದ್ದೇನೆ. ಈಗಿನ ಸರ್ಕಾರದ ಸಚಿವರು ನನಗೆ ಚಿರಪರಿಚಿತ. ಹೀಗಾಗಿ, ಪ್ರೀತಿಯಿಂದ ಕ್ಷೇತ್ರದ ಕೆಲಸ ಮಾಡಿಕೊಡುತ್ತಿದ್ದಾರೆ’ ಎಂದು ನುಡಿದರು.
‘ಸಮ್ಮಿಶ್ರ ಸರ್ಕಾರದಲ್ಲಿ ಉಂಟಾದ ನೋವಿನಿಂದ ನಾನಿನ್ನೂ ಹೊರಬಂದಿಲ್ಲ. ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ’ ಎಂದರು.