ಹಾಸನ: ವರ್ಷಕ್ಕೆ ಒಮ್ಮೆ ದರ್ಶನ ಭಾಗ್ಯ ಕರುಣಿಸುವ ಅಧಿದೇವತೆ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಗುರುವಾರ ಚಾಲನೆ ದೊರೆಯಲಿದೆ.
ಸಂಪ್ರದಾಯದಂತೆ ಅಶ್ವಯುಜ ಮಾಸದ ಪೂರ್ಣಿಮೆಯ ನಂತರ ಮೊದಲ ಗುರುವಾರ ಮಧ್ಯಾಹ್ನ 12.30ಕ್ಕೆ ಅರಸು ವಂಶಸ್ಥ ನಂಜರಾಜ ಅರಸ್ ಅವರು ಬಾಳೆ ಕಂದು ಕಡಿದ ಬಳಿಕ ಅಮ್ಮನವರ ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ.
ಈ ಬಾರಿ ಅ.29 ರ ವರೆಗೆ ದೇವಿಯ ದರ್ಶನೋತ್ಸವವಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.